ಬೆಂಗಳೂರು : ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರ ಕ್ಷೇತ್ರಗಳು ಸೇರಿದಂತೆ ಒಟ್ಟು ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 3 ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಬೆಂಗಳೂರು ವ್ಯಾಪ್ತಿಯ ಒಂದು ಪದವೀಧರ ಮತ್ತು ಒಂದು ಶಿಕ್ಷಕರ ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡು ಬಿಜೆಪಿ ಹಿನ್ನಡೆ ಅನುಭವಿಸಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಿಜೆಪಿಯ ಭದ್ರಕೋಟೆಯಾಗಿದ್ದ ಬೆಂಗಳೂರು ಪದವೀಧರ ಕ್ಷೇತ್ರ ಬಿಜೆಪಿಯ ಕೈ ತಪ್ಪಿದ್ದು, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ 36,729 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ. ಹಾಲಿ ಸದಸ್ಯ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ 24,888 ಮತ ಪಡೆದು ಸೋಲನಭವಿಸಿದ್ದಾರೆ. ಚಲಾವಣೆಯಾದ 80,080 ಮತಗಳ ಎಣಿಕೆ ಆರು ಸುತ್ತುಗಳಲ್ಲಿ ನಡೆದಿದ್ದು, ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಅಗ್ನೇಯ ಕ್ಷೇತ್ರ :
ತ್ರಿಕೋನ ಸ್ಪರ್ಧೆ ಇದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಜಯಗಳಿಸಿದ್ದಾರೆ. ಹಾಲಿ ಸದಸ್ಯ ಬಿಜೆಪಿಯ ನಾರಾಯಣಸ್ವಾಮಿ ಸೋಲನುಭವಿಸಿದ್ದಾರೆ‌. ಚಲಾವಣೆಯಾದ 24,106 ಮತಗಳ ಎಣಿಕೆ ಏಳು ಸುತ್ತುಗಳಲ್ಲಿ ನಡೆದಿದೆ. ಕಾಂಗ್ರೆಸ್‌ ಅಭ್ಯರ್ಥಿ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ 8,909 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ 7,142 ಮತ ಪಡೆದರು. ಪಕ್ಷೇತರ ಅಭ್ಯರ್ಥಿ ವಿನೋದ ಶಿವರಾಜ ಅವರು 6,894 ಮತ ಪಡೆಯುವ ಮೂಲಕ ತೀವ್ರ ಪೈಪೋಟಿ ನೀಡಿದರು.
ಈ ಎರಡೂ ಕ್ಷೇತ್ರಗಳಲ್ಲಿ ಈ ಮೊದಲು ಬಿಜೆಪಿ ಗೆಲುವು ಸಾಧಿಸಿತ್ತು. ಈ ಎರಡೂ ಕ್ಷೇತ್ರಗಳು ಈಗ ಕಾಂಗ್ರೆಸ್ ಪಾಲಾಗಿವೆ.

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕೈಗೆ ಜೈಕಾರ​:
ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ಐದಕ್ಕೆ ಐದು ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್‌ ಈಗ ಪರಿಷತ್ತಿನ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿಯೂ ಗೆಲುವಿನ ಓಟ ಮುಂದುವರಿಸಿದೆ. ಕಾಂಗ್ರೆಸ್‌ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಸತತ ಎರಡನೇ ಭಾರಿಗೆ ಗೆಲುವಿನ ನಗೆ ಬಿರಿದ್ದಾರೆ. ಮತ್ತೊಮ್ಮೆ ಕಲ್ಯಾಣದಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.
ಪ್ರಥಮ ಪ್ರಾಶಸ್ತ್ಯದ ಮತ ಎಣೀಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ 39,496 ಮತಗಳು ಪಡೆದು ಪ್ರತಿಸ್ಪರ್ಧಿ ಬಿ.ಜೆ.ಪಿಯ ಅಮರನಾಥ ಪಾಟೀಲ ಅವರಿಗಿಂತ 4,446 ಮತಗಳಿಂದ ಮುಂದಿದ್ದರು. ಆದರೆ ವಿನ್ನಿಂಗ್ ಕೋಟಾವನ್ನು 48,260 ನಿಗದಿಪಡಿಸಿದ್ದರಿಂದ ಎರಡನೇ ಪ್ರಾಶಸ್ತ್ಯ ಮತ ಎಣಿಕೆ ಮಾಡುವುದು ಅನಿವಾರ್ಯವಾಯಿತು.
ಮತ ಎಣಿಕೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ ಭರ್ಜರಿ ಜಯ ಗಳಿಸಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ ಜಯಭೇರಿ :
ವಿಧಾನಷರಿಷತ್​ನ ಮೂರು ಕ್ಷೇತ್ರಗಳ ಮತ ಎಣಿಕೆ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಗುರುವಾರ ಬೆಳಗ್ಗೆ 8 ಗಂಟೆಯಿಂದ ನಡೆಯಿತು. ಮೂರೂ ಕ್ಷೇತ್ರಗಳಲ್ಲೂ ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿಜೆಡಿಎಸ್‌ ಅಭ್ಯರ್ಥಿ ಕೆ.ವಿವೇಕಾನಂದ 10,823 ಮತಗಳನ್ನು ಪಡೆದರೆ, ಇವರ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಮರೀತಿಬ್ಬೇಗೌಡ 6,201 ಮತಗಳನ್ನು ಪಡೆದು 4,622 ಮತಗಳ ಅಂತರದಿಂದ ಸೋಲನುಭವಿಸಿದರು. ವಿವೇಕಾನಂದ ಅವರು ಮೊದಲ ಪ್ರಾಶಸ್ತ್ಯ ಮತಗಳಿಂದಲೇ ಸತತವಾಗಿ ನಾಲ್ಕು ಸಲ ಗೆದ್ದಿದ್ದ ಮರಿತಿಬ್ಬೇಗೌಡ ಅವರನ್ನು ಸೋಲಿಸಿ ಇದೇ ಮೊದಲ ಬಾರಿಗೆ ವಿಧಾನ ಪರಿಷತ್​ ಪ್ರವೇಶಿಸಿದ್ದಾರೆ.

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲೂ ಜೆಡಿಎಸ್‌ ಗೆಲುವು…
ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಭೋಜೇಗೌಡ ಗೆಲುವು ಸಾಧಿಸಿದ್ದಾರೆ. ಭೋಜೇಗೌಡ ಅವರು ಸಹ ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆಯುವ ಮೂಲಕ 2ನೇ ಬಾರಿಗೆ ವಿಧಾನಪರಿಷತ್ತಿಗೆ ಆಯ್ಕೆಯಾದರು. ಅವರು 9,829 ಮತಗಳನ್ನು ಪಡೆದರೆ ಕಾಂಗ್ರೆಸ್‌ ಅಭ್ಯರ್ಥಿ ಡಾ.ಕೆ.ಕೆ. ಮಂಜುನಾಥ ಅವರು 4,562 ಮತಗಳನ್ನು ಪಡೆದರು. ಭೋಜೇಗೌಡ ಅವರು 5,267 ಪ್ರಥಮ ಪ್ರಾಶಸ್ತ್ಯದ ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದರು.

ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು :
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಡಾ. ಧನಂಜಯ ಸರ್ಜಿ ಅವರು ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಬಿಜೆಪಿಗೆ ಸಮಾಧಾನ ತಂದಿದ್ದಾರೆ. ಡಾ. ಧನಂಜಯ ಸರ್ಜಿ 37,627 ಮತ ಪಡೆದರೆ, ಕಾಂಗ್ರೆಸ್‌ ಅಭ್ಯರ್ಥಿ ಆಯನೂರು ಮಂಜುನಾಥ ಕೇವಲ 13,516 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ 7,039 ಮತ ಪಡೆದು ಸೋಲು ಅನುಭವಿಸಿದ್ದಾರೆ.