ಮೈಸೂರು : ಸಂಡೂರು ವಿಧಾನಸಭಾ ಉಪಚುನಾವಣೆಯಲ್ಲಿ ಬಳ್ಳಾರಿ ಸಂಸದ ತುಕಾರಾಮ ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನವೆಂಬರ್ 13 ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಆಗಬಹುದು. ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರುವ ಬಗ್ಗೆ ನಾನು ಅವರೊಂದಿಗೆ ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಅವರಿಗೆ ಸ್ವಾಗತಿಸಲಾಗುವುದು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸಂಡೂರು ಉಪಚುನಾವಣೆಗೆ ಬಿಜೆಪಿ ಈಗಾಗಲೇ ಎಸ್ಟಿ ಮೋರ್ಜಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಅವರ ಹೆಸರನ್ನು ಘೋಷಣೆ ಮಾಡಿ ಭರ್ಜರಿ ಪ್ರಚಾರ ಆರಂಭಿಸಿದೆ. ಕಾಂಗ್ರೆಸ್ ಇನ್ನಷ್ಟೇ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕಾಗಿದೆ. ಈ ಮೊದಲು ಸಂಡೂರು ಉಪಚುನಾವಣೆಗೆ ತುಕಾರಾಮ ಅವರ ಪತ್ನಿ ಅನ್ನಪೂರ್ಣ ಹಾಗೂ ಅವರ ಪುತ್ರಿ ಸೌಪರ್ಣಿಕಾ ಅವರ ಹೆಸರು ಕೇಳಿಬಂದಿತ್ತು. ಇದೀಗ ಅಂತಿಮವಾಗಿ ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ದೊರೆಯುತ್ತಿದ್ದು ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಅವರ ಹೆಸರಿಗೆ ಮುದ್ರೆ ಒತ್ತಬೇಕಾಗಿದೆ.