ತುಮಕೂರು: ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರು ಸಮಯಪ್ರಜ್ಞೆ, ಮಾನವೀಯತೆ ಮತ್ತು ಕರ್ತವ್ಯನಿಷ್ಠೆಯನ್ನು ಪ್ರದರ್ಶಿಸಿ, ಹೃದಯಾಘಾತ ಶಂಕೆಯಿಂದ ಅಸ್ವಸ್ಥಗೊಂಡ ಪ್ರಯಾಣಿಕರೊಬ್ಬರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ದೊರಕುವಂತೆ ಮಾಡುವ ಮೂಲಕ ಜೀವ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಘಟನೆ ನಡೆದಿದೆ.
ತುಮಕೂರಿನಿಂದ ಮಧುಗಿರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಈ ಘಟನೆ ಸಂಭವಿಸಿದೆ. ಪ್ರಯಾಣದ ವೇಳೆ ಒಬ್ಬ ಪ್ರಯಾಣಿಕರಿಗೆ ಏಕಾಏಕಿ ತೀವ್ರ ಎದೆನೋವು ಕಾಣಿಸಿಕೊಂಡು, ಕೆಲವೇ ಕ್ಷಣಗಳಲ್ಲಿ ಅವರು ಕುಸಿದುಬಿದ್ದ ಪರಿಣಾಮ ಬಸ್ನಲ್ಲಿದ್ದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಪರಿಸ್ಥಿತಿಯ ಗಂಭೀರತೆಯನ್ನು ತ್ಷಣವೇ ಅರಿತ ಚಾಲಕ ನಿಗದಿತ ಸಮಯ ವ್ಯರ್ಥ ಮಾಡದೇ ಮಾರ್ಗದಲ್ಲಿ ಹೋಗದೆ ಬಸ್ ಅನ್ನು ತುಮಕೂರು–ಮಧುಗಿರಿ ರಸ್ತೆಯಲ್ಲಿರುವ ಸಾಚಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯತ್ತ ಚಲಾಯಿಸಿದ್ದಾರೆ.
ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಪ್ರವೇಶ ದ್ವಾರದ ಬಳಿ ಚಾಲಕ ಬಸ್ ಅನ್ನು ತಂದು ನಿಲ್ಲಿಸಿದ್ದಾನೆ. ನಂತರ ಸಹಪ್ರಯಾಣಿಕರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ಕೂಡಲೇ ಒಳಗೆ ಸಾಗಿಸಿ ತುರ್ತು ಚಿಕಿತ್ಸೆಗೆ ದಾಖಲಿಸಿದರು.
ಬಸ್ನಲ್ಲಿದ್ದ ಪ್ರಯಾಣಿಕರು ಚಾಲಕರ ಸಮಯೋಚಿತ ನಿರ್ಧಾರ ಹಾಗೂ ಸಮಚಿತ್ತದ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಚಾಲಕರ ವೃತ್ತಿಪರತೆ, ಮಾನವೀಯತೆ ಮತ್ತು ಪ್ರಯಾಣಿಕರ ಸುರಕ್ಷತೆಯ ಮೇಲಿನ ಬದ್ಧತೆಗೆ ಸಾಕ್ಷಿಯಾಗಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಸಾರಿಗೆ ಸಿಬ್ಬಂದಿಯ ಪಾತ್ರ ಎಷ್ಟೊಂದು ಮಹತ್ವದ್ದಾಗಿರಬಹುದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಕಲ್ಯಾಣಕ್ಕೆ ಕೆಎಸ್ಆರ್ಟಿಸಿ ನೀಡುತ್ತಿರುವ ಆದ್ಯತೆಯನ್ನೂ ಇದು ಎತ್ತಿ ತೋರಿಸಿದೆ.
ಚಾಲಕರ ಸಮಯಪ್ರಜ್ಞೆ ಮತ್ತು ಮಾನವೀಯ ಸೇವಾಭಾವ ಇದೀಗ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಸಂಕಷ್ಟದ ಕ್ಷಣದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬಹುದು ಎಂಬುದಕ್ಕೆ ಈ ಘಟನೆ ಅತ್ಯುತ್ತಮ ಉದಾಹರಣೆಯಾಗಿ ಪರಿಣಮಿಸಿದೆ.


,


















