ಬೆಳಗಾವಿ : ಕಿತ್ತೂರು ತಾಲೂಕು ತಿಗಡೊಳ್ಳಿ ಗ್ರಾಮದ ವ್ಯಕ್ತಿಯೊಬ್ಬ ಎಸಗಿದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಸಾಬೀತುಕೊಂಡಿರುವ ಹಿನ್ನೆಲೆಯಲ್ಲಿ ಆತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10,000 ₹ ದಂಡ ವಿಧಿಸಿ ಇಲ್ಲಿನ ವಿಶೇಷ ಶೀಘ್ರಗತಿ ನ್ಯಾಯಾಲಯ ಸೋಮವಾರದಂದು ಮಹತ್ವದ ತೀರ್ಪು ನೀಡಿದೆ.

ತಿಗಡೊಳ್ಳಿ ಗ್ರಾಮದ ಗಂಗಪ್ಪ ಕಲ್ಲಪ್ಪ ಕೋಲ್ಕಾರ ಎಂಬಾತನೇ ಶಿಕ್ಷೆಗೆ ಒಳಗಾದ ಅಪರಾಧಿ. ಬಾಲಕಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿದ್ದ ಈತನು, 2017 ರ ಸೆಪ್ಟೆಂಬರ್ ನಲ್ಲಿ ಬೈಕ್ ಮೇಲೆ ಅಪ್ರಾಪ್ತೆಯನ್ನು ಅಪಹರಿಸಿ ಮಹಾರಾಷ್ಟ್ರದ ತಾಸಗಾಂವ ಎಂಬಲ್ಲಿ ಬಿಲ್ಡಿಂಗ್ ನಲ್ಲಿ ಇರಿಸಿದ್ದ. ಅಲ್ಲೇ ಮೇಲಿಂದ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ತನಿಖಾಧಿಕಾರಿ ರಾಘವೇಂದ್ರ ಹವಾಲ್ದಾರ್ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಈ ಮಹತ್ವದ ತೀರ್ಪನ್ನು ಪ್ರಕಟಿಸಿದ್ದಾರೆ. ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಅಭಿಯೋಜಕ ಎಲ್ .ವಿ.ಪಾಟೀಲ ವಾದ ಮಂಡಿಸಿದ್ದರು.