ಉಡುಪಿ/ಮಂಗಳೂರು:ಶೈಕ್ಷಣಿಕ ಕ್ಷೇತ್ರದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸದಾ ಮುಂದೆ ಇರುತ್ತದೆ. ಈ ಕಾರಣಕ್ಕಾಗಿಯೇ ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳ ವಿದ್ಯಾರ್ಥಿಗಳು ಕರಾವಳಿ ಜಿಲ್ಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಕ್ಷಣ ಪಡೆಯುವುದು ಇತ್ತೀಚಿನ ದಶಕಗಳಲ್ಲಿ ಸಾಮಾನ್ಯವಾಗಿದೆ. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಮೊದಲ ಎರಡು ಸ್ಥಾನಗಳನ್ನು ತಾವೇ ಅಲಂಕರಿಸುತ್ತಿವೆ. ದ್ವಿತಿಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಅಲಂಕರಿಸಿತ್ತು. ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ಜಿಲ್ಲೆ ದ್ವಿತಿಯ ಸ್ಥಾನ ಪಡೆದುಕೊಂಡಿವೆ.

ಕಳೆದ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಗಳಿಸಿತ್ತು.

ಈ ಬಾರಿಯ ಎಸ್ಸೆಸ್ಸೆಲ್ಸಿ–1ರ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದೆ. ನೆರೆಯ ಉಡುಪಿ ಜಿಲ್ಲೆ 89.96 ಶೇಕಡಾ ಅಂಕಗಳಿಸುವ ಮೂಲಕ ದ್ವಿತೀಯ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಕರಾವಳಿಯ ಇನ್ನೊಂದು ಜಿಲ್ಲೆಯಾಗಿರುವ ಉತ್ತರ ಕನ್ನಡ 83.19 ಅಂಕ ಗಳಿಸಿದೆ.

ಕಳೆದ ಸಾಲಿನಲ್ಲಿ ನೆರೆಯ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಎರಡನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಜಿಲ್ಲೆಯ ಒಟ್ಟು ಫಲಿತಾಂಶ ಶೇ 91.12 ರಷ್ಟಾಗಿದೆ.

ಪರೀಕ್ಷೆಗೆ ಹಾಜರಾಗಿದ್ದ 27,795 ವಿದ್ಯಾರ್ಥಿಗಳಲ್ಲಿ 25,326 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಸಾಲಿನಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ ಶೇ 92.12ರಷ್ಟಾಗಿತ್ತು.

ಶೇ 94 ಬರಬಹುದೆಂಬ ನಿರೀಕ್ಷೆ ಇತ್ತು. ಒಟ್ಟಾರೆ ಫಲಿತಾಂಶ ಕಡಿಮೆಯಾಗಿರುವ ಕಾರಣ ಜಿಲ್ಲೆಯಲ್ಲಿ ನಮ್ಮ ನಿರೀಕ್ಷೆಗಿಂತ ಸ್ವಲ್ಪ ಕಡಿಮೆ ಫಲಿತಾಂಶ ಬಂದರೂ, ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ. ಶಿಕ್ಷಕರು, ವಿದ್ಯಾರ್ಥಿಗಳ ಶ್ರಮದಿಂದ ಇದು ಸಾಧ್ಯವಾಗಿದೆ. ಪಾಲಕರು ತುಂಬಾ ಸಹಕಾರ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಡಿಡಿಪಿಐ ಗೋವಿಂದ ಮಡಿವಾಳ ಪ್ರತಿಕ್ರಿಯಿಸಿದರು.

ಡಿಸೆಂಬರ್‌ ಕೊನೆಯೊಳಗೆ ಪಠ್ಯಕ್ರಮ ಪೂರ್ಣಗೊಳಿಸಿ, ಪಾಠಗಳ ಪುನರಾವರ್ತನೆ, ಪಾಸಿಂಗ್‌ ಪ್ಯಾಕೇಜ್‌ ಪರಿಣಾಮ ನೀಡಿವೆ. ಕಲಿಕೆಯಲ್ಲಿ ಹಿಂದಿರುವ ಮಕ್ಕಳ ಅನುಕೂಲಕ್ಕಾಗಿ ಶಿಕ್ಷಕರ ಜೊತೆಗೂಡಿ ವಿಜಯೀಭವ ಪತ್ರಿಕೆ ಪ್ರಾರಂಭಿಸಲಾಗಿತ್ತು. ಇದರಲ್ಲಿ ದಿನಕ್ಕೆ ಎರಡು ವಿಷಯಗಳ ಐದು ಪ್ರಶ್ನೆ ಮತ್ತು ಉತ್ತರ ಸಿದ್ಧಪಡಿಸಿ, ಪಿಡಿಎಫ್‌ ಮೂಲಕ ಮಕ್ಕಳಿಗೆ ತಲುಪಿಸಲಾಗುತ್ತಿತ್ತು. ಇದರಿಂದ ಸಾಕಷ್ಟು ಮಕ್ಕಳಿಗೆ ಅನುಕೂಲವಾಗಿದೆ ಎಂದು ಅವರು ತಿಳಿಸಿದರು.

ಉಡುಪಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶದಲ್ಲಿ ಕಳೆದ ಬಾರಿ ಮೊದಲ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆಯು ಈ ಬಾರಿ ದ್ವಿತೀಯ ಸ್ಥಾನಕ್ಕಿಳಿದಿದೆ.

ಜಿಲ್ಲೆಯಲ್ಲಿ ಒಟ್ಟು 13,579 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 12,215 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ 89.96ರಷ್ಟು ಫಲಿತಾಂಶ ಬಂದಿದೆ.

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸ್ವಸ್ತಿ ಕಾಮತ್ 625 ರಲ್ಲಿ 625 ಅಂಕಗಳನ್ನು ಪಡೆದಿದ್ದಾರೆ.