ಜಲ್ನಾ: 2017ರಲ್ಲಿ ರಾಷ್ಟ್ರದಾದ್ಯಂತ ಭಾರಿ ಸುದ್ದಿ ಮಾಡಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ ಪಂಗರ್ಕರ್ ಅವರು ವಿಧಾನಸಭೆ ಚುನಾವಣೆಗೆ ಮುನ್ನ ಜಲ್ನಾದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಪಕ್ಷವನ್ನು ಸೇರಿದ್ದಾರೆ ಎಂದು ಹಲವಾರು ಮಾಧ್ಯಮಗಳು ವರದಿ ಮಾಡಿವೆ.
ಗೌರಿ ಲಂಕೇಶ್ ಅವರನ್ನು 2017ರ ಸೆಪ್ಟೆಂಬರ್ 5ರಂದು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಅವರ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿತ್ತು. ನಂತರ ಮಹಾರಾಷ್ಟ್ರದ ತನಿಖಾ ಸಂಸ್ಥೆಗಳ ಸಹಾಯದಿಂದ ಕರ್ನಾಟಕದಲ್ಲಿ ಪೊಲೀಸರು ನಡೆಸಿದ ತನಿಖೆಯು ಹಲವರನ್ನು ಬಂಧಿಸಲು ಕಾರಣವಾಯಿತು.

2001 ಮತ್ತು 2006 ರ ನಡುವೆ ಅವಿಭಜಿತ ಶಿವಸೇನೆಯ ಜಲ್ನಾ ಪುರಸಭೆಯ ಕೌನ್ಸಿಲರ್ ಆಗಿದ್ದ ಪಂಗರ್ಕರ್ ಅವರನ್ನು ಆಗಸ್ಟ್ 2018 ರಲ್ಲಿ ಬಂಧಿಸಲಾಯಿತು ಮತ್ತು ಈ ವರ್ಷ ಸೆಪ್ಟೆಂಬರ್ 4 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತು.

2011 ರಲ್ಲಿ ಶಿವಸೇನೆಯಿಂದ ಟಿಕೆಟ್ ನಿರಾಕರಿಸಿದ ನಂತರ, ಶ್ರೀಕಾಂತ ಪಂಗರ್ಕರ್ ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಗೆ ಸೇರಿದರು. ಅವರು ಶುಕ್ರವಾರ ಪಕ್ಷದ ನಾಯಕ ಮತ್ತು ಮಾಜಿ ರಾಜ್ಯ ಸಚಿವ ಅರ್ಜುನ ಖೋಟ್ಕರ್ ಅವರ ಸಮ್ಮುಖದಲ್ಲಿ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದರು. “ಪಂಗಾರ್ಕರ್ ಅವರು ಮಾಜಿ ಶಿವಸೈನಿಕರು ಮತ್ತು ಪಕ್ಷಕ್ಕೆ ಮರಳಿದ್ದಾರೆ. ಅವರನ್ನು ಜಲ್ನಾ ವಿಧಾನಸಭಾ ಚುನಾವಣಾ ಪ್ರಚಾರದ ಮುಖ್ಯಸ್ಥರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ” ಎಂದು ಖೋಟ್ಕರ್ ಸುದ್ದಿಗಾರರಿಗೆ ತಿಳಿಸಿದರು.
ಖೋಟ್ಕರ್ ಅವರು ಜಲ್ನಾದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವುದಾಗಿ ಹೇಳಿದರು, ಆದರೆ ಮಹಾಯುತಿಯಲ್ಲಿ (ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡಿರುವ ಆಡಳಿತ ಮೈತ್ರಿ) ಸೀಟು ಹಂಚಿಕೆ ಚರ್ಚೆಗಳು ಇನ್ನೂ ನಡೆಯುತ್ತಿವೆ ಎಂದು ತಿಳಿಸಿದರು.
ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಪ್ರಸ್ತುತ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಳ್ಳುತ್ತದೆ.