ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಬೆಳಗಾವಿ ಕ್ಷೇತ್ರ ನಾಡಿನ ಗಮನ ಸೆಳೆದಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಯುವ ನಾಯಕನ ಸ್ಪರ್ಧೆಯಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ದಿನೇ ದಿನೇ ರಂಗೇರುತ್ತಿದೆ.

ಹಿಂದಿನ ಚುನಾವಣೆಗಳಲ್ಲಿ ಎದುರಾದ ಸೋಲಿನ ಸೇಡು ತೀರಿಸಿಕೊಳ್ಳಲು ಇದೀಗ ನಾಯಕರು ರಣತಂತ್ರ ಹೆಣೆಯುತ್ತಿರುವುದು ಕಂಡು ಬಂದಿದೆ. ಒಟ್ಟಾರೆ ಸದ್ಯ ಒಂದು ಕಾಲದ ಆಪ್ತರು ಇದೀಗ ಶತ್ರುಗಳಾಗಿ ಪರಿಣಮಿಸಿರುವುದು ವಿಶೇಷ.

ಗೋಕಾಕಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳಿದ ‌ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮಾಜಿ ಸಚಿವ, ಬಿಜೆಪಿ ಶಾಸಕ ​​ರಮೇಶ್​ ಜಾರಕಿಹೊಳಿ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಬೆಳಗಾವಿ ಹಾಲಿ ಸಂಸದೆ ಮಂಗಲಾ ಅಂಗಡಿ ಅವರ ವಿಶ್ವೇಶ್ವರಯ್ಯ ನಗರದಲ್ಲಿರುವ ನಿವಾಸದಲ್ಲಿ ಉಭಯ ನಾಯಕರ ಸಭೆ ನಡೆದಿದೆ. ಚುನಾವಣೆ ತಂತ್ರದ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ಬೆಳಗಾವಿಯಲ್ಲಿ ಬಿಜೆಪಿ ಗೆಲ್ಲಿಸಲು ರಮೇಶ ಜಾರಕಿಹೊಳಿ ಪಣ ತೊಟ್ಟಿದ್ದಾರೆ.

ಒಂದೂವರೆ ಗಂಟೆಗಳ ಕಾಲ ಶೆಟ್ಟರ್ ಹಾಗೂ ರಮೇಶ್ ಜಾರಕಿಹೊಳಿ ಚುನಾವಣೆ ತಂತ್ರಗಾರಿಕೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಇದೇ ವೇಳೆ, ಸೋಮವಾರದಿಂದ ಚುನಾವಣೆ ಪ್ರಚಾರಕ್ಕೆ ಬರುವುದಾಗಿ ರಮೇಶ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಬೆಳಗಾವಿಯಲ್ಲಿ ಹೇಗಾದರೂ ಮಾಡಿ ಬಿಜೆಪಿಯನ್ನು ಗೆಲ್ಲಿಸಬೇಕು. ಆ ಮೂಲಕ ವಿಧಾನಸಭೆ ಚುನಾವಣೆಯಲ್ಲಿನ ಸೇಡನ್ನು ಲೋಕಸಭೆ ಚುನಾವಣೆಯಲ್ಲಿ ತೀರಿಸಿಕೊಳ್ಳಬೇಕು ಎಂಬ ಲೆಕ್ಕಾಚಾರವನ್ನು ರಮೇಶ ಹಾಕಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ಪ್ರಯತ್ನಿಸಿ ರಮೇಶ್ ವಿಫಲರಾಗಿದ್ದರು. ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಸೋಲಿಸಲು ಬಿಜೆಪಿಯ ಜಾರಕಿಹೊಳಿ ಸಹೋದರರು ತಂತ್ರ ಹೆಣೆಯುತ್ತಿದ್ದಾರೆ.

ಮತ್ತೊಂದೆಡೆ, ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮೃಣಾಲ್‌ ಬೆನ್ನಿಗೆ ನಿಂತಿದ್ದಾರೆ. ಗೋಕಾಕ ಕ್ಷೇತ್ರದಲ್ಲಿ ಮೃಣಾಲ್‌ ಜೊತೆಗೆ ಸತೀಶ ಜಾರಕಿಹೊಳಿ ಪ್ರಚಾರಾಭಿಯಾನ ನಡೆಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅಭ್ಯರ್ಥಿ ಮೃಣಾಲ್‌ ಜೊತೆಗೆ ಕಾಂಗ್ರೆಸ್ ‌ಕಾರ್ಯಕರ್ತರ ಸಭೆಯನ್ನೂ ನಡೆಸಿದ್ದಾರೆ.

ಈ ಮಧ್ಯೆ ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ವಿರುದ್ಧ ಸ್ಥಳೀಯ ಕಾರ್ಯಕರ್ತರಲ್ಲಿ ಹಾಗೂ ಮುಖಂಡರಲ್ಲಿರುವ ಮನಸನ್ನು ತಣಿಸುವಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಬಹುತೇಕ ಯಶಸ್ವಿಯಾಗಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿ ಕೂಡ ಶೆಟ್ಟರ್ ಬೆನ್ನಿಗೆ ನಿಂತಿರುವುದು ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಬಲ ತಂದುಕೊಟ್ಟಂತಾಗಿದೆ.