ಗೋಕಾಕ- ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅರಭಾವಿ ಕ್ಷೇತ್ರವು ಮತ್ತೊಂದು ಬಾರಿ ಸಾಧನೆ ಮಾಡಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಿಸಲು ಕಾರ್ಯಕರ್ತರು ಶ್ರಮಿಸುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು.


ಬುಧವಾರದಂದು ನಗರದ ಎನ್.ಎಸ್.ಎಫ್ ಕಛೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದ ಸಕ್ರೀಯ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುಮಾರು ಐವತ್ತು ಸಾವಿರಕ್ಕಿಂತ ಅಧಿಕ ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಹೆಚ್ಚಿನ ಸಾಧನೆ ಮಾಡಲು ಕಾರಣೀಕರ್ತರಾಗುವಂತೆ ಅವರು ಹೇಳಿದರು.
ರಾಜ್ಯದ ಸಮಗ್ರ ಅಭಿವೃದ್ಧಿ ನಮ್ಮ ಬಿಜೆಪಿಯಿಂದ ಮಾತ್ರ ಸಾಧ್ಯ. ಈಗಿರುವ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ನಿರೀಕ್ಷಿಸಲು ಅಸಾಧ್ಯವಾಗಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ನಡೆಯುತ್ತಿಲ್ಲ. ಯಾವ ಅನುದಾನವನ್ನು ಸಹ ನೀಡುತ್ತಿಲ್ಲ. ಕಳೆದ ಒಂದುವರೆ ವರ್ಷದಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜನರ ಸಂಕಷ್ಟಕ್ಕೆ ಬರುತ್ತಿಲ್ಲವೆಂದು ದೂರಿದರು. ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿರುವ ಅನುದಾನವನ್ನೂ ಸಹ ತಡೆ ಹಿಡಿಯುತ್ತಿದ್ದಾರೆ. ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮಂಜೂರಾಗಿದ್ದ ೨ ಕೋ.ರೂ. ಅನುದಾನವನ್ನು ತಡೆ ಹಿಡಿದಿದ್ದರಿಂದ ವಿಪ ಸದಸ್ಯ ಲಖನ್ ಜಾರಕಿಹೊಳಿ ಅವರ ನಿಧಿಯಿಂದ ಒಂದು ಕೋ.ರೂ. ಅನುದಾನವನ್ನು ಹೊಂದಾಣಿಕೆ ಮಾಡಿಕೊಂಡು ಒಟ್ಟು ೨ ಕೋ.ರೂ. ಅನದಾನವನ್ನು ನಮ್ಮ ಕ್ಷೇತ್ರದ ದೇವಸ್ಥಾನವೊಂದಕ್ಕೆ ನೀಡಲಾಯಿತು ಎಂದು ಸರ್ಕಾರದ ನಡೆಯನ್ನು ಟೀಕಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೇ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಅಲ್ಲಿಯತನಕ ನಮಗೆ ಅಭಿವೃದ್ಧಿ ಕನಸಾಗಿಯೇ ಉಳಿಯಲಿದೆ. ಮುಂಬರುವ ತಾ.ಪಂ ಮತ್ತು ಜಿ.ಪಂ. ಚುನಾವಣೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲು ಕಾರ್ಯಕರ್ತರು ಈಗಿನಿಂದಲೇ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು. ನಮ್ಮ ಬಿಜೆಪಿ ಸರ್ಕಾರದ ಸಾಧನೆಗಳನ್ನು ಸಹ ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ನಡೆಯಬೇಕಾಗಿದೆ ಎಂದು ಅವರು ತಿಳಿಸಿದರು.
ವೇದಿಕೆಯಲ್ಲಿ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ, ಬಿಜೆಪಿ ರಾಜ್ಯ ಮಾಧ್ಯಮ ಸಂಚಾಲಕ ಎಫ್. ಎಸ್. ಸಿದ್ದನಗೌಡರ, ಜಿಲ್ಲಾ ಪ್ರ.ನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಈರಣ್ಣ ಅಂಗಡಿ, ಪ್ರ. ಕಾರ್ಯದರ್ಶಿಗಳಾದ ಪರಸಪ್ಪ ಬಬಲಿ, ಮಹಾಂತೇಶ ಕುಡಚಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.