ಬೆಳಗಾವಿ :
“ಬಿಜೆಪಿ ನಾಯಕರು ಬರಗಾಲದ ಬಗ್ಗೆ ಸುಮ್ಮನೆ ಮಾತನಾಡುವ ಬದಲು ಕೇಂದ್ರ ಸರ್ಕಾರದಿಂದ ಪರಿಹಾರ ತರಲಿ ಹಾಗೂ ನರೇಗಾ ಯೋಜನೆಯಡಿ ಮಾನವ ದಿನಗಳನ್ನು 150ಕ್ಕೆ ಹೆಚ್ಚಳ ಮಾಡಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ಬೆಳಗಾವಿ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಉತ್ತರಿಸಿದರು.

ಬರಗಾಲದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರು ರಾಜ್ಯ ಬಿಟ್ಟು ತೆಲಂಗಾಣಕ್ಕೆ ಹೋಗಿದ್ದಾರೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು;

“ಬರಗಾಲ ಬಂದಿದೆ. ವಿರೋಧ ಪಕ್ಷದ ನಾಯಕರು ಕೂಡ ಬರ ಅಧ್ಯಯನಕ್ಕಾಗಿ ಓಡಾಡಿದ್ದಾರೆ. ಅವರು ಕೇಂದ್ರ ಸರ್ಕಾರದಿಂದ ಪರಿಹಾರ ಹಣ ಕೊಡಿಸಲಿ. ಬರಗಾಲ ಹಿನ್ನೆಲೆಯಲ್ಲಿ ನರೇಗಾ ಯೋಜನೆಯಲ್ಲಿ ಕಾನೂನಿನ ಪ್ರಕಾರ ಪ್ರತಿ ವ್ಯಕ್ತಿಗೆ ಇರುವ 100 ಕೆಲಸದ ದಿನಗಳನ್ನು 150 ದಿನಗಳಿಗೆ ವಿಸ್ತರಣೆ ಮಾಡಬಹುದು. ಇದನ್ನು ಕೇಂದ್ರ ಸರ್ಕಾರದಿಂದ ಘೋಷಣೆ ಮಾಡಿಸುತ್ತಿಲ್ಲ ಯಾಕೆ? ಕೇಂದ್ರ ಸರ್ಕಾರದಿಂದ ಪರಿಹಾರ ಹಣ ಕೊಡಿಸುತ್ತಿಲ್ಲ ಯಾಕೆ?

ನಮ್ಮ ಸರ್ಕಾರದಲ್ಲಿ ಕಂದಾಯ ಹಾಗೂ ಕೃಷಿ ಸಚಿವರುಗಳು ಎಲ್ಲರಿಗಿಂತ ಮುಂಚಿತವಾಗಿ ರಾಜ್ಯದ ಬರ ಪರಿಸ್ಥಿತಿ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಕ್ಕೆ ತುತ್ತಾಗಿದ್ದು, ಪರಿಹಾಣ ಬೇಕು ಎಂದು ಕೇಳಿದ್ದಾರೆ. ಈವರೆಗೂ ಕೇಂದ್ರ ಸರ್ಕಾರ ಬಿಡಿಗಾಸು ಪರಿಹಾರ ನೀಡಿಲ್ಲ. ಈಗ ಅವರು ಬಿಜೆಪಿ ನಾಯಕರು ತಮ್ಮ ವರದಿ ಕೊಟ್ಟು ಪರಿಹಾರ ಕೊಡಿಸಲಿ. ಬರಗಾಲ ಎಂದು ಕೇವಲ ಮಾತನಾಡುವುದಲ್ಲ. ಬರೀ ಆರೋಪ ಮಾಡುವುದಕ್ಕಿಂತ ತಾನು ಏನು ಮಾಡಿದ್ದೇವೆ ಎಂದು ಹೇಳಬೇಕು” ಎಂದು ತಿಳಿಸಿದರು.

ರಾಜ್ಯ ಸರ್ಕಾರದ ವತಿಯಿಂದ ಯಾವ ಪ್ಯಾಕೇಜ್ ಘೋಷಣೆ ಮಾಡುತ್ತೀರಾ ಎಂದು ಕೇಳಿದಾಗ, “ಈ ವಿಚಾರವಾಗಿ ಮುಖ್ಯಮಂತ್ರಿಗಳು ಯಾರಿಗೆ ಯಾವ ರೀತಿ ಪರಿಹಾರ ನೀಡಬೇಕು ಎಂದು ಮಾತನಾಡಿದ್ದಾರೆ. ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು, ಗೋಶಾಲೆಗಳಿಗೆ ಮೇವು ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ” ಎಂದು ತಿಳಿಸಿದರು.

ಇನ್ನು ತೆಲಂಗಾಣ ಸರ್ಕಾರ ರಚನೆ ಬಗ್ಗೆ ಮಾತನಾಡಿ, “ಸೋನಿಯಾ ಗಾಂಧಿ ಅವರು ತೆಲಂಗಾಣ ರಾಜ್ಯ ರಚನೆಗೆ ನೆರವಾಗಿದ್ದರು. ಕೆಸಿಆರ್ ಅವರು ಪಕ್ಷವನ್ನು ವಿಲೀನ ಮಾಡಿ ನಮ್ಮ ಜೊತೆ ಇರುವುದಾಗಿ ಹೇಳಿದ್ದರು. ಆದರೆ ಅವರು ಪ್ರತ್ಯೇಕವಾಗಿ 10 ವರ್ಷಗಳ ಕಾಲ ಸರ್ಕಾರ ನಡೆಸಿದರು. ಈ ವಿಚಾರವಾಗಿ ನಾವು ಜನರಿಗೆ ಮನದಟ್ಟು ಮಾಡಿಕೊಟ್ಟು ನಿಮ್ಮಲ್ಲಿ ಬದಲಾವಣೆ ತರುತ್ತೇವೆ ಎಂದು ಭರವಸೆ ನೀಡಿದೆವು. ಹೀಗಾಗಿ ತೆಲಂಗಾಣ ರಾಜ್ಯದ ಜನ ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟಿದ್ದಾರೆ. ಇಂದು ತೆಲಂಗಾಣದಲ್ಲಿ ಸರ್ಕಾರ ರಚನೆಯಾಗಿದೆ. ನಾನು, ಮುಖ್ಯಮಂತ್ರಿಗಳು ಸೇರಿದಂತೆ ಕೆಲವು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇವೆ” ಎಂದು ತಿಳಿಸಿದರು.

ಬೆಳಗಾವಿ ಅಧಿವೇಶನ ಬಿಟ್ಟು ಕಾಂಗ್ರೆಸ್ ಸಚಿವರು ತೆಲಂಗಾಣದಲ್ಲಿದ್ದಾರೆ ಎಂದು ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ನಮ್ಮ ರಾಜ್ಯದ ಚುನಾವಣೆ ಸಂದರ್ಭದಲ್ಲಿ ಕೇರಳ, ಮಹಾರಾಷ್ಟ್ರ, ಆಂಧ್ರ ಪ್ರದೇಶ ಸೇರಿದಂತೆ ನೆರೆ ರಾಜ್ಯದ ಕಾಂಗ್ರೆಸ್ ನಾಯಕರು ಬಂದು ಕೆಲಸ ಮಾಡಿದ್ದರು. ಹೀಗಾಗಿ ನಮ್ಮ 45 ನಾಯಕರು ಎರಡು ಮೂರು ತಿಂಗಳ ಕಾಲ ಇಲ್ಲಿ ಕೆಲಸ ಮಾಡಿದ್ದಾರೆ. ರಾಜಕಾರಣದಲ್ಲಿ ಒಬ್ಬರಿಗೊಬ್ಬರು ಸಹಾಯ ಮಾಡಿದ್ದೇವೆ” ಎಂದರು.

ಮುಂದೆ ಜಾಮೀನು ಪಡೆಯಲು ನಾರಾಯಣ ಹೃದಯಾಲಯದಲ್ಲಿ ಬೆಡ್ ಬುಕ್ ಮಾಡಿಕೊಳ್ಳಲಿ ಎಂಬ ಯತ್ನಾಳ್ ಅವರ ಟೀಕೆ ಬಗ್ಗೆ ಕೇಳಿದಾಗ, “ಅವರು ಹೇಳಿದಂತೆ ಮಾಡೋಣ” ಎಂದರು.

ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ತುಷ್ಟೀಕರಣ ಮಾಡುತ್ತಿದೆ ಎಂಬ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ದೇಶದ ಸಂವಿಧಾನದಲ್ಲಿ ಎಲ್ಲಾ ಜನಾಂಗಕ್ಕೆ ರಕ್ಷಣೆ ನೀಡಬೇಕು ಎಂದು ಹೇಳಿದೆ. ಜನಸಂಖ್ಯೆ ಆಧಾರದ ಮೇಲೆ ಆಯಾ ವರ್ಗಕ್ಕೆ ಸಹಾಯ ಮಾಡುತ್ತೇವೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರಿಗೂ ನಾವು ಸಹಾಯ ಮಾಡುತ್ತಿದ್ದೇವೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದ ಮೇಲೆ ನಾವು ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.