ಬೆಂಗಳೂರು :

ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರನ್ನು ಕೆಣಕಿದ್ದು ಸಾಲು ಸಾಲು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?
ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಹಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ?.
ಹುಬ್ಬಳ್ಳಿ -ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಣ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಹಾ ಅವರೇ?
ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು ಒಂದು ಕಿಲೋಗೆ 33 ರೂಪಾಯಿ ಕೊಟ್ಟು ಖರೀದಿಸುತ್ತೇವೆ ಎಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ‘’ಭಾರತ್ ಬ್ರಾಂಡ್’’ ಎಂಬ ಹೆಸರಿನಲ್ಲಿ ಒಂದು ಕಿಲೋಗೆ ರೂ.29ರಂತೆ ಮಾರಾಟ ಮಾಡಲು ಹೊರಟಿದೆ. ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ ಅಮಿತ್ ಶಹಾ ಅವರೇ?
ಸುಮಾರು 2.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸುವ ಭದ್ರ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿ ವರ್ಷಗಳೇ ಕಳೆದಿವೆ. ಆದರೆ ಈ ವರೆಗೆ ಒಂದೇ ಒಂದು ಪೈಸೆ ಅನುದಾನ ನೀಡಿಲ್ಲ. ಕೃಷ್ಣಾ ,ಕಾವೇರಿ, ಮಹದಾಯಿ, ಮೇಕೆದಾಟು ಸೇರಿದಂತೆ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಇದೇ ರೀತಿಯ ನಿರ್ಲಕ್ಷ್ಯ ಯಾಕೆ?

ತೆರಿಗೆ ಸಂಗ್ರಹಿಸಿ ದೇಶದ ಬೊಕ್ಕಸಕ್ಕೆ ತುಂಬುವುದರಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಆದರೆ ಹದಿನೈದನೇ ಹಣಕಾಸು ಆಯೋಗ ತೆರಿಗೆ ಹಂಚಿಕೆಯ ಪ್ರಮಾಣವನ್ನು ಶೇಕಡಾ 4.7ರಿಂದ ಶೇಕಡಾ 3.74ಕ್ಕೆ ಇಳಿಸಿದೆ. ಕನ್ನಡಿಗರ ಬೆವರಿನ ತೆರಿಗೆಯ ಮೇಲೆ ಯಾಕೆ ಕೇಂದ್ರ ಸರ್ಕಾರಕ್ಕೆ ಕೆಂಗಣ್ಣು? ಅತ್ತ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಇತ್ತ ತಾರತಮ್ಯದಿಂದಾಗಿರುವ ನಷ್ಟ ತುಂಬುವ ವಿಶೇಷ ಅನುದಾನಕ್ಕೂ ಹಣಕಾಸು ಸಚಿವರಿಂದ ಕೊಕ್ಕೆ? ಇಂತಹ ಅನ್ಯಾಯ ಎಸಗಿ ಕರ್ನಾಟಕಕ್ಕೆ ಬಂದು ಕನ್ನಡಿಗರನ್ನು ಹೇಗೆ ಎದುರಿಸುತ್ತೀರಿ ಅಮಿತ್ ಶಹಾ ಅವರೇ?