ಬೆಂಗಳೂರು :

“ಈಶ್ವರಪ್ಪನವರ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ.ಕೆ. ಸುರೇಶ್ ಅವರ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

ನಗರದ ಖಾಸಗಿ ಹೋಟೇಲ್ ನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆ ಸಂದರ್ಭದಲ್ಲಿ ಮಾಧ್ಯಮಗಳು, ಸಂಸದ ಡಿ ಕೆ ಸುರೇಶ್ ಅವರಿಗೆ ಗುಂಡಿಕ್ಕುವ ಸಂಬಂಧ ತಾವು ನೀಡಿದ್ದ ಹೇಳಿಕೆಗೆ ಕ್ಷಮೆ ಕೇಳುವುದಿಲ್ಲ ಎಂಬ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಶನಿವಾರ ಉತ್ತರಿಸಿದ್ದು ಹೀಗೆ:

“ಅವರಿಗೆ ಕ್ಷಮೆ ಕೇಳಿ ಎಂದು ಯಾರೂ ಹೇಳಿಲ್ಲ. ಸದನದಲ್ಲಿ ನಮ್ಮ ತಂದೆ ಬಗ್ಗೆ ಮಾತನಾಡಿದ್ದರು. ಅದಕ್ಕೆ ಒಂದು ಸುತ್ತಿನ ಸೆಟ್ಲಮೆಂಟ್ ಮಾಡಿದ್ದೇವೆ. ಈಶ್ವರಪ್ಪ ಈಗ ಎಲ್ಲಿದ್ದಾರೆ? ನಮ್ಮ ವಿಚಾರಕ್ಕೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ. ಈಶ್ವರಪ್ಪ ಗುಂಡಿಟ್ಟು ಕೊಲ್ಲುವುದಾದರೆ ಕೊಲ್ಲಲಿ. ಅವರ ಹೇಳಿಕೆಗೆ ನಡುಗುವ ರಕ್ತ ಡಿ ಕೆ ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಪೂರ್ವಜರಾದ ಕೆಂಪೇಗೌಡರ ಇತಿಹಾಸ ಗೊತ್ತಿದೆಯೇ? ನಮಗೆ ನಮ್ಮದೇ ಆದ ಇತಿಹಾಸವಿದೆ. ನಾವು ಕಿವಿ ಮೇಲೆ ಹೂವ ಇಟ್ಟುಕೊಂಡು ರಾಜಕಾರಣ ಮಾಡಲು ಬಂದಿಲ್ಲ” ಎಂದು ತಿರುಗೇಟು ನೀಡಿದರು.

*ಜನರ ಅಭಿಪ್ರಾಯ ಸಂಗ್ರಹಿಸಲು ಪ್ರಣಾಳಿಕೆ ಸಮಿತಿ ಸಭೆ:*

ಇಂದು ಕಾಂಗ್ರೆಸ್ ಪಕ್ಷದ ಕೇಂದ್ರ ಪ್ರಣಾಳಿಕೆ ಸಮಿತಿ ಸಭೆ ನಡೆಯುತ್ತಿದೆ. ನಮ್ಮ ಮುಖ್ಯಮಂತ್ರಿಗಳು ಈ ಸಮಿತಿ ಸದಸ್ಯರಾಗಿದ್ದಾರೆ. ಈಗಾಗಲೇ ಈ ಸಮಿತಿ ಅನೇಕ ಸಭೆಗಳನ್ನು ಮಾಡಿದ್ದು ಇಲ್ಲಿನ ಜನರು ಹಾಗೂ ಸಂಘ, ಸಂಸ್ಥೆಗಳ ಅಭಿಪ್ರಾಯ ಸಂಗ್ರಹಿಸಲು ಇಂದು ಸಭೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಪಿ. ಚಿದಂಬರಂ ಅವರು ಕೂಡ ಇಂದಿನ ಸಭೆಗೆ ಆಗಮಿಸಬೇಕಿತ್ತು.

ಇಂದಿನ ಸಭೆಗೆ ಸುಮಾರು 150 ಜನರು ಹಾಗೂ ಸಂಘ ಸಂಸ್ಥೆಗಳಿಗೆ ಆಹ್ವಾನ ನೀಡಿದ್ದೆವು. ಬಹುತೇಕ ಎಲ್ಲರೂ ಸಭೆಗೆ ಆಗಮಿಸಿ ತಮ್ಮ ಸಲಹೆ ನೀಡುತ್ತಿದ್ದಾರೆ. ನಾವು ರಾಷ್ಟ್ರದ ಭದ್ರತೆ, ಎಲ್ಲಾ ವರ್ಗದ ಜನರಿಗೆ ಅನುಕೂಲ ಮಾಡಿಕೊಡುವುದನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ಮಾಡುತ್ತೇವೆ. ಈ ಹಿಂದೆ ನಾವು ಮಾಡಿದ ಗ್ಯಾರಂಟಿ ಪ್ರಣಾಳಿಕೆ ದೇಶಕ್ಕೆ ಮಾದರಿಯಾಗಿತ್ತು. ಅದನ್ನು ನಾವು ಕಾರ್ಯರೂಪಕ್ಕೆ ತಂದಿದ್ದೇವೆ. ನಾವು ಕಾರ್ಯರೂಪಕ್ಕೆ ತರಲು ಸಾಧ್ಯವಾಗುವ ಕಾರ್ಯಕ್ರಮಗಳನ್ನು ಮಾತ್ರ ಘೋಷಣೆ ಮಾಡುತ್ತೇವೆ.

ಇಂಡಿಯಾ ಒಕ್ಕೂಟ ಕೂಡ ಸಭೆ ನಡೆಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಿದೆ. ಎಲ್ಲರೂ ಒಟ್ಟಾಗಿ ದೇಶದಲ್ಲಿ ಬದಲಾವಣೆ, ಕ್ರಾಂತಿ ತರಲು ಹೋರಾಟ ಮಾಡುತ್ತೇವೆ. ಭಾವನೆ ಬಿಟ್ಟು ಜನರು ಬದುಕಿನತ್ತ ಸಾಗಿಸಿಕೊಂಡು ಹೋಗುವಂತೆ ಮಾಡಲು ನಾವು ಬದ್ದರಿದ್ದೇವೆ.