ಬೆಳಗಾವಿ :
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ವೆಚ್ಚ ವೀಕ್ಷಕರು ನಗರದ ವಾರ್ತಾಭವನದಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಸೋಮವಾರ(ಏ.29) ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬೆಳಗಾವಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಹರಕ್ರಿಪಾಲ್ ಖಟಾನಾ ಅವರು, ದಿನಪತ್ರಿಕೆ, ಟಿವಿ ಚಾನೆಲ್‌ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಪ್ರತಿಯೊಂದು ಚುನಾವಣಾ ಸುದ್ದಿ‌ ಹಾಗೂ ಜಾಹೀರಾತುಗಳ ಮೇಲೆ ನಿಗಾ ವಹಿಸಬೇಕು ಎಂದು ತಿಳಿಸಿದರು.

ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳ ಚುನಾವಣಾ ಜಾಹೀರಾತುಗಳಿಗೆ ಸಂಬಂಧಿಸಿದ ವೆಚ್ಚವನ್ನು ಸಹಾಯಕ ವೆಚ್ಚ ನೋಡಲ್ ಅಧಿಕಾರಿಗಳ ಗಮನಕ್ಕೆ ತರಬೇಕು.
ಇದಲ್ಲದೇ ಮಾದರಿ ನೀತಿಸಂಹಿತೆ ಉಲ್ಲಂಘನೆ ಕಂಡುಬಂದರೆ ಅಂತಹ ವಿಷಯಗಳನ್ನು ಕೂಡ ಎಂ.ಸಿ.ಸಿ. ನೋಡಲ್ ಅಧಿಕಾರಿಗಳ ಅವಗಾಹನೆಗೆ ತರಬೇಕು ಎಂದು ತಿಳಿಸಿದರು.

ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ)ಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ನೀಡಿದ ನೋಡಲ್ ಅಧಿಕಾರಿ ಗುರುನಾಥ ಕಡಬೂರ ಅವರು, ಪ್ರತಿಯೊಂದು ದಿನಪತ್ರಿಕೆಗಳು, ಟಿವಿ ಚಾನೆಲ್‌ ಮಾತ್ರವಲ್ಲದೇ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗಿರುತ್ತದೆ ಎಂದು ವಿವರಿಸಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ನರಸಿಂಗ್ ರಾವ್ ಬಿ., ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಎನ್.ಮೋಹನ‌ ಕೃಷ್ಣಾ, ಅಂಕಿತ್ ತಿವಾರಿ, ಐ.ಎ.ಎಸ್.ಪ್ರೊಬೇಷನರಿ ಅಧಿಕಾರಿ ಶುಭಂ ಶುಕ್ಲಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಾಧ್ಯಮ‌ ಘಟಕದ‌ ಉಸ್ತುವಾರಿಗಳಾದ ಶ್ರೀಮತಿ ಝಡ್.ಜಿ.ಸಯ್ಯದ್, ವಿ.ಎಂ.ಕಂಗ್ರಾಳಕರ, ಶ್ರೀಮತಿ ಎಂ.ಎಂ.ಪಾಟೀಲ, ಎಸ್.ಎಸ್.ಘೋರ್ಪಡೆ, ಎ.ಬಿ.ಕಾಮಣ್ಣವರ, ಎಂ.ಪಿ.ನಿಚ್ಚಣಕಿ, ಮಹಾಂತೇಶ ಪತ್ತಾರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.