ಬೆಳಗಾವಿ : ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ರಾಮದುರ್ಗದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರ ಮನವೊಲಿಸುವಲ್ಲಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಕೊನೆಗೂ ಯಶಸ್ವಿಯಾಗಿದ್ದಾರೆ.

ರಾಮದುರ್ಗದ ಮಹಾದೇವಪ್ಪ ಯಾದವಾಡ ನಿವಾಸಕ್ಕೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಸುದೀರ್ಘ ಮಾತುಕತೆ ನಡೆಸಿ ಈ ಬಾರಿ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಲ್ಲಣ್ಣ ಯಾದವಾಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು. ಮಹಾದೇವಪ್ಪ ಯಾದವಾಡ ಮಾತನಾಡಿ, ಹಿಂದಿನ ಚುನಾವಣೆಗಳಲ್ಲಿ ಸುರೇಶ ಅಂಗಡಿ ಅವರಿಗೆ ನೀಡುತ್ತಿದ್ದ 27000 ಲೀಡನ್ನು ಜಗದೀಶ್ ಶೆಟ್ಟರ್ ಅವರಿಗೆ ಸಹಾ ನೀಡುತ್ತೇವೆ. ರಾಮದುರ್ಗದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ವಿಧಾನಸಭಾ ಚುನಾವಣೆಯಲ್ಲಿ
ಮಹಾದೇವಪ್ಪ ಯಾದವಾಡ ಅವರು ಬಿಜೆಪಿ ಟಿಕೆಟ್ ವಂಚಿತರಾದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದರು. ಕಾಂಗ್ರೆಸ್ ಇವರನ್ನು ಸೆಳೆಯಲು ಮುಂದಾಗಿತ್ತು. ಆದರೆ ಅಷ್ಟರಲ್ಲಿ ಮಧ್ಯಪ್ರವೇಶಿಸಿದ ಶೆಟ್ಟರ್ ಅವರ ಮನೆಗೆ ಭೇಟಿ ನೀಡಿ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.