ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರತಿ ವರ್ಷ ನೀಡುವ ‘ಗಡಿನಾಡ ಚೇತನ ರಾಜ್ಯ ಪ್ರಶಸ್ತಿ’ಗೆ ಕೇರಳದ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಸೇರಿ ಮೂವರು ಆಯ್ಕೆಯಾಗಿದ್ದಾರೆ. ನಾಡು, ನುಡಿ, ಸಾಹಿತ್ಯ ಹಾಗೂ ಕನ್ನಡ ಭಾಷೆಗಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಹಾಗೂ ಹೊರ ರಾಜ್ಯದ ಗಡಿ ಕನ್ನಡ ಪ್ರದೇಶಗಳ ಸಂಘ- ಸಂಸ್ಥೆಗಳು, ಮಹನೀಯರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

ಮಾರ್ಚ್‌ 1ರಂದು ನಡೆದ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ನೇತೃತ್ವದ ಆಯ್ಕೆ ಸಮಿತಿ ಸಭೆಯಲ್ಲಿ 2023-24ನೇ ಸಾಲಿನ “ಗಡಿನಾಡ ಚೇತನ” ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಭಾಲ್ಕಿ ಹಿರೇಮಠದ ಪೂಜ್ಯ ಶ್ರೀ ಡಾ.ಚನ್ನಬಸವ ಪಟ್ಟದೇವರು ಹೆಸರಲ್ಲಿ ಸ್ಥಾಪಿಸಿರುವ ಪ್ರಶಸ್ತಿಗೆ ಕೇರಳದ ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡದ ಏಕೀಕರಣ ಹೋರಾಟದ ವೀರಾಗ್ರಣಿ ಡಾ.ಜಯದೇವಿತಾಯಿ ಲಿಗಾಡೆ ಅವರ ಹೆಸರಲ್ಲಿ ಸ್ಥಾಪಿಸಿರುವ ಪ್ರಶಸ್ತಿಗೆ ಬೀದರಿನ ಪಂಚಾಕ್ಷರಿ ಪುಣ್ಯಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಹಾಗೂ ಹಾಗೂ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರಶಸ್ತಿಗೆ ಬೆಳಗಾವಿಯ ಸಾಹಿತಿ ಪ್ರೊ.ಬಿ.ಎಸ್.ಗವಿಮಠ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಹಾಗೂ ಸನ್ಮಾನ ಒಳಗೊಂಡಿದೆ.

ಈ ಪ್ರಶಸ್ತಿಗಳಿಗೆ ಆಯ್ಕೆ ಮಾಡಲು 2023- 24ನೇ ಸಾಲಿನಲ್ಲಿ ಸರ್ಕಾರ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯಲ್ಲಿ‌ ಆಯ್ಕೆ ಸಮಿತಿ ರಚಿಸಿತ್ತು. ಸಮಿತಿಯಲ್ಲಿ ಸಾಹಿತಿ ಡಾ.ಸರಜೂ ಕಾಟ್ಕರ್, ಆಂಧ್ರಪ್ರದೇಶದ ಕನ್ನಡ ಪ್ರಾಧ್ಯಾಪಕರಾದ ಡಾ.ಎಂ.ಎಸ್.ದುರ್ಗಾ ಪ್ರವೀಣ, ದಕ್ಷಿಣ ಕನ್ನಡ ಜಿಲ್ಲೆಯ ಕನ್ನಡ ಪ್ರಾಧ್ಯಾಪಕ ಡಾ.ಆರ್.ನಾಗಪ್ಪಗೌಡ ಮತ್ತು ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಇದ್ದರು.