
ಉಡುಪಿ: ಶ್ರೀಕೃಷ್ಣಮಠದ ಸರ್ವಜ್ಞ ಪೀಠಕ್ಕೆ ಸೌರ ಯುಗಾದಿ ಪರ್ವದಿನವಾದ ಸೋಮವಾರ ಸುವರ್ಣ ಕವಚ ತೊಡಿಸಲಾಯಿತು.
ಅದಮಾರು ಮಠದ ಹಿರಿಯ ಯತಿ ವಿಶ್ವಪ್ರಿಯತೀರ್ಥ ಶ್ರೀಪಾದರು ಶ್ರೀಕೃಷ್ಣ- ಮುಖ್ಯಪ್ರಾಣ ದೇವರ ಉತ್ಸವ ಮೂರ್ತಿಯನ್ನು ಸರ್ವಜ್ಞ ಪೀಠದಲ್ಲಿಟ್ಟು ಪೂಜಿಸಿದರು.
ಪರ್ಯಾಯ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು, ಶ್ರೀಮದಾನಂದತೀರ್ಥ ಶ್ರೀಪಾದರು ಕುಳಿತಿರುವ ಸರ್ವಜ್ಞ ಪೀಠಕ್ಕೆ ಸುವರ್ಣ ಕವಚ ತೊಡಿಸಿ ಶ್ರೀಕೃಷ್ಣನಿಗೆ ಸಮರ್ಪಿಸುವ ಮೂಲಕ ತಮ್ಮ ಸನ್ಯಾಸಾಶ್ರಮದ ಸುವರ್ಣ ಮಹೋತ್ಸವ ಆಚರಿಸಿದರು.
ಪುತ್ತಿಗೆ ಕಿರಿಯ ಸುಶ್ರೀಂದ್ರತೀರ್ಥ ಶ್ರೀಪಾದರು, ಭಂಡಾರಕೇರಿ ಮಠಾಧೀಶ ವಿದೇಶತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು. ಶ್ರೀಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.