ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಅತ್ಯಾಚಾರ ಯತ್ನ ಮತ್ತು ಕೊಲೆ ಪ್ರಕರಣದ ಆರೋಪಿಯ ಎನ್‌ಕೌಂಟರ್‌, ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ.

ಎನ್‌ಕೌಂಟರ್‌ನಲ್ಲಿ ಭಾಗಿಯಾದ ದಿಟ್ಟ ಮಹಿಳಾ ಪೊಲೀಸ್‌ ಅಧಿಕಾರಿ ಪಿಎಸ್‌ಐ ಅನ್ನಪೂರ್ಣ ಅವರ ಬಗ್ಗೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿ ಬಿಹಾರ ಮೂಲದ ರಿತೇಶ್‌ ಕುಮಾರ್‌, ಹುಬ್ಬಳ್ಳಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ರಿತೇಶ್‌ ಕುಮಾರ್‌ ಎನ್‌ಕೌಂಟರ್‌ನಲ್ಲಿ ಪ್ರಮುಖ ಪಾತ್ರವಹಿಸಿದ ಹುಬ್ಬಳ್ಳಿಯ ಮಹಿಳಾ ಪೊಲೀಸ್‌ ಅಧಿಕಾರಿ ಅನ್ನಪೂರ್ಣ ಅವರಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

ಹುಬ್ಬಳ್ಳಿ ಬಾಲಕಿ ಅತ್ಯಾಚಾರ ಯತ್ನ ಮತ್ತು ಕೊಲೆ ಪ್ರಕರಣದ ಆರೋಪಿಯ ಎನ್‌ಕೌಂಟರ್‌ನಲ್ಲಿ ಪಿಎಸ್‌ಐ ಅನ್ನಪೂರ್ಣ ನಿರ್ವಹಿಸಿದ ಪಾತ್ರ ಮೆಚ್ಚುಗೆಗೆ ಪಾತ್ರವಾಗಿದೆ. ಪಿಎಸ್‌ಐ ಅನ್ನಪೂರ್ಣ ಅವರ ಬಗ್ಗೆ ಇದೀಗ ಚರ್ಚೆಯಾಗುತ್ತಿದ್ದು, ಈ ದಿಟ್ಟ ಅಧಿಕಾರಿಣಿಯನ್ನು ಜನರು ತಮ್ಮ ಮನೆ ಮಗಳಂತೆ ನೋಡುತ್ತಿದ್ದಾರೆ.ಆರೋಪಿ ರಿತೇಶ್‌ ಕುಮಾರ್‌ ಎನ್‌ಕೌಂಟರ್‌ ಘಟನೆಯಲ್ಲಿ ಪಿಎಸ್‌ಐ ಅನ್ನಪೂರ್ಣ ಅವರೂ ಗಾಯಗೊಂಡಿದ್ದು, ಹುಬ್ಬಳ್ಳಿಯ ಕೀಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪಿಎಸ್‌ಐ ಅನ್ನಪೂರ್ಣ ಅವರ ಚೇತರಿಕೆಗೆ ಇಡೀ ರಾಜ್ಯದ ಜನ ಪ್ರಾರ್ಥಿಸುತ್ತಿದ್ದಾರೆ. ಇದೇ ವೇಳೆ ಆಕೆಯ ದಿಟ್ಟತನವನ್ನು ಜನರು ಕೊಂಡಾಡುತ್ತಿದ್ದಾರೆ.ಪಿಎಸ್‌ಐ ಅನ್ನಪೂರ್ಣ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗಳಾಗುತ್ತಿದ್ದು, ನೆಟ್ಟಿಗರು ಈ ಅಧಿಕಾರಿಯನ್ನು “ಭದ್ರಕಾಳಿ” ಎಂದು ಕೊಂಡಾಡಿದ್ದಾರೆ. ಅನೇಕರು ಆಕೆಯ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದು, ಆರೋಪಿಗೆ ತಕ್ಕ ಶಿಕ್ಷೆ ನೀಡಿದ “ಪಿಎಸ್‌ಐ ಅನ್ನಪೂರ್ಣ ಅವರಿಗೆ ಧನ್ಯವಾದ” ಎಂದು ಹೇಳಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತ ಎನ್.‌ ಶಶಿಕುಮಾರ್ ಮಾತನಾಡಿ, ಬಾಲಕಿ ಅತ್ಯಾಚಾರ ಯತ್ನ ಮತ್ತು ಕೊಲೆ ಆರೋಪಿ ರಿತೇಶ್‌ ಕುಮಾರ್‌ ಎನ್‌ಕೌಂಟರ್‌ ಹೇಗಾಯಿತು ಎಂಬುದನ್ನು ವಿವರಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಕಾಣೆ ಪ್ರಕರಣ ಬೆಳಕಿಗೆ ಬಂದಿತ್ತು. ಪೊಲೀಸರು ತನಿಖೆ ಕೈಗೆತ್ತಿಕೊಂಡಾಗ ಆಕೆಯ ಶವ ವಿಜಯನಗರದ ಶೆಡ್‌ವೊಂದರಲ್ಲಿ ಸಿಕ್ಕಿತು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಸಿಸಿಟಿವಿ ಕ್ಯಾಮರಾ ಮತ್ತು ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ, ಆರೋಪಿ ಬಿಹಾರ ಮೂಲದ ರಿತೇಶ್‌ ಕುಮಾರ್‌ ಎಂಬಾತನನ್ನು ಬಂಧಿಸಿದರು.ಆದರೆ ಆರೋಪಿ ರಿತೇಶ್‌ ಕುಮಾರ್‌ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಮತ್ತು ಆತನ ದಾಖಲೆಗಳನ್ನು ಪರಿಶೀಲಿಸಲು, ಪೊಲೀಸರು ಆತನನ್ನು ತಾರಿಹಾಳ ಸೇತುವೆ ಬಳಿ ಇರುವ ಪಾಳು ಬಿದ್ದ ಮನೆಯೊಂದಕ್ಕೆ ಕರೆದೊಯ್ದಾಗ, ಆರೋಪಿಯು ಪೊಲೀಸರತ್ತ ಕಲ್ಲು ತೂರಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.ಕೂಡಲೇ ಕಾರ್ಯಪ್ರವೃತ್ತರಾದ ಮಹಿಳಾ ಪೊಲೀಸ್‌ ಅಧಿಕಾರಿ ಅನ್ನಪೂರ್ಣ, ಮೊದಲು ಏರ್‌ಫೈರ್‌ ಮಾಡಿ ಆರೋಪಿಯನ್ನು ತಡೆಯಲೆತ್ನಿಸಿದ್ದಾರೆ. ಆದರೆ ಆತ ಅನ್ನಪೂರ್ಣ ಅವರ ಮೇಲೂ ಹಲ್ಲೆ ನಡೆಸಿ ಓಡಿ ಹೋಗುತ್ತಿದ್ದಾಗ, ಪಿಎಸ್‌ಐ ಅನ್ನಪೂರ್ಣ ಅವರು ಆತನ ಕಾಲು ಮತ್ತು ಬೆನ್ನಿನ ಭಾಗಕ್ಕೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಆರೋಪಿಯನ್ನು ಕೂಡಲೇ ಕಿಮ್ಸ್‌ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ರಿತೇಶ್‌ ಕುಮಾರ್‌ ಮಾರ್ಗ ಮಧ್ಯೆಯೇ ಅಸುನೀಗಿದ್ದಾನೆ ಎಂದು ವೈದ್ಯರು ಘೋಷಿಸಿದರು. ಸದ್ಯ ಆರೋಪಿ ರಿತೇಶ್‌ ಕುಮಾರ್‌ ನಡೆಸಿದ ಹಲ್ಲೆಯಿಂದ ಗಾಯಗೊಂಡಿರುವ ಪಿಎಸ್‌ಐ ಅನ್ನಪೂರ್ಣ ಮತ್ತು ಇತರ ಇಬ್ಬರು ಪೊಲೀಸ್‌ ಸಿಬ್ಬಂದಿಗೆ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್‌ ಆಯುಕ್ತ ಎನ್.‌ ಶಶಿಕುಮಾರ್‌ ಮಾಹಿತಿ ನೀಡಿದ್ದಾರೆ.ಒಟ್ಟಿನಲ್ಲಿ ಏನೂ ಅರಿಯದ ಹುಬ್ಬಳ್ಳಿಯ ಮುಗ್ಧ ಬಾಲಕಿಯ ಜೀವ ತೆಗೆದ ಆರೋಪಿ ರಿತೇಶ್‌ ಕುಮಾರ್ ಎನ್‌ಕೌಂಟರ್‌ಗೆ ಬಲಿಯಾಗಿದ್ದು, ಅತ್ಯಾಚಾರಿಗಳ ಪಾಲಿಗೆ ಇದೊಂದು ಎಚ್ಚರಿಕೆಯ ಕರೆ ಗಂಟೆಯಾಗಿದೆ.