ಬೆಂಗಳೂರು :
ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆಯಾದ ಪ್ರಮುಖ ಅಂಶಗಳು.

 

ಕೃಷಿ

ಹೊಲವನುತ್ತು ಬಿತ್ತೋರು
ಬೆಳೆಯ ಕುಯ್ದು ಬೆವರೋರು
ಬಿಸಿಲಿನಲ್ಲಿ ಬೇಯೋರು ನನ್ನ ಜನಗಳು
– ಪದ್ಮಶ್ರೀ ಡಾ|| ಸಿದ್ದಲಿಂಗಯ್ಯ

29. ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ರೈತರಿಗೆ ಕೆಳಕಂಡ ವಿಷಯಗಳಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗುವುದು;
• ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು.
• ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು.
• ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡುವುದು.
• ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಬೆಂಬಲ ನೀಡುವುದು.
• ರೈತರಿಗೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಕುರಿತು ಅರಿವು ಮೂಡಿಸುವುದು.
• ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು.
30. ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಅನುವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶುಸಂಗೋಪನೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು.
31. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ಈ ಯೋಜನೆಯನ್ನು ಮುಂದುವರೆಸಲಾಗುವುದು.
32. ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್ ಅನ್ನು ಸ್ಥಾಪಿಸಲಾಗುವುದು.
33. ನಮ್ಮ ಮಿಲ್ಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್ಸ್ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು.
34. ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿ ವರ್ಷ
1,000 ದಂತೆ ಒಟ್ಟು 5,೦೦೦ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು.
35. ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯ ಆರ್.ಕೆ. ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಗಳನ್ನು ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.
36. ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ
ಸಲಹೆ ನೀಡಲು ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ e-SAP ತಂತ್ರಾಂಶದ ಸೌಲಭ್ಯವನ್ನು ಎಲ್ಲಾ ರೈತರಿಗೆ ಪರಿಚಯಿಸಲು ಕ್ರಮ ವಹಿಸಲಾಗುವುದು.
37. ಆಹಾರ ಸಂಸ್ಕರಣಾ ವಲಯವು ರೈತರ ಆದಾಯ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಕೃಷಿ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕ ಆಹಾರ ಸಂಸ್ಕರಣಾ ಆಯುಕ್ತಾಲಯ ರಚಿಸಲಾಗುವುದು. ಇದರ ಮೂಲಕ ವಿವಿಧ ಇಲಾಖೆಗಳಡಿಯಲ್ಲಿರುವ ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು.
38. ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು ಕ್ರಮವಹಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಉದ್ದೇಶಕ್ಕಾಗಿ PMFME ಯೋಜನೆಯಡಿಯಲ್ಲಿ 80 ಕೋಟಿ ರೂ.ಗಳನ್ನು ಒದಗಿಸಲಾಗುವುದು.
39. ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುವುದು.
40. ಕೃಷಿ ನಾವೀನ್ಯತೆಯ ಯುಗದಲ್ಲಿ ಪಾರಂಪರಿಕ ಕೃಷಿ ಪದ್ಧತಿಯಲ್ಲಿ ಗಣನೀಯ ಬದಲಾವಣೆಗಳಾಗಿದ್ದು, ಉಪಗ್ರಹ ಚಿತ್ರ, ಸೆನ್ಸರ್ಗಳ ಬಳಕೆ ಮತ್ತು ಮಷಿನ್ ಲರ್ನಿಂಗ್ ನಂತಹ (Machine Learning) ಅತ್ಯಾಧುನಿಕ ತಂತ್ರಜ್ಞಾನಗಳನ್ನು ಆಧರಿಸಿ ಬೆಳೆಯ ಉತ್ಪಾದಕತೆ ಮುನ್ಸೂಚನೆಯನ್ನು ಮಾಡಲು ಒಂದು ದತ್ತಾಂಶವನ್ನು ಅಭಿವೃದ್ಧಿಪಡಿಸಲಾಗುವುದು.
41. ರೈತ ಉತ್ಪಾದಕ ಸಂಸ್ಥೆಗಳನ್ನು (FPO) ಇನ್ನಷ್ಟು ಸದೃಢ
ಮತ್ತು ಸುಸ್ಥಿರವಾಗಿ ಕಾರ್ಯನಿರ್ವಹಿಸಲು ಪೂರಕವಾದ
ತರಬೇತಿ, ಮಾರ್ಗದರ್ಶನ ಹಾಗೂ ಬೆಂಬಲ ನೀಡುವ
Agri Accelerator Platform ಮೂಲಕ ಕೃಷಿ ವಲಯದ Start-up ಗಳನ್ನು ಉತ್ತೇಜಿಸಲಾಗುವುದು.
42. ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು.

*ತೋಟಗಾರಿಕೆ*

43. ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ಗಳನ್ನು ಸ್ಥಾಪಿಸಲಾಗುವುದು.
44. ರಾಜ್ಯದಲ್ಲಿ 40,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿರುವ ಪುಷ್ಪ ಬೆಳೆಗಳ ಮಾರಾಟ ಮತ್ತು ರಫ್ತನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
45. ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತಿನ ಪ್ರಮಾಣ ಹೆಚ್ಚಿಸಲು ಕೊಯ್ಲೋತರ ನಿರ್ವಹಣಾ ಕೇಂದ್ರ (Packhouse) ಹಾಗೂ ಮೌಲ್ಯವರ್ಧನ ಸಂಸ್ಕರಣಾ ಘಟಕಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
46. ರಾಜ್ಯದಲ್ಲಿ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣೆ ಚಟುವಟಿಕೆಗಳನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು.
47. ತೋಟಗಾರಿಕೆ ಬೆಳೆಗಳಲ್ಲಿ ಹೆಚ್ಚು ಇಂಗಾಲವನ್ನು ಹಿಡಿದಿಟ್ಟುಕೊಳ್ಳುವ ಬೆಳೆಗಳನ್ನು ಗುರುತಿಸಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ
Carbon Credit ರೂಪದಲ್ಲಿ ಮಾರಾಟ ಮಾಡುವ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಲು ಅನುಕೂಲವಾಗುವಂತೆ ಉತ್ತೇಜನ ನೀಡಲಾಗುವುದು.
48. ರಾಜ್ಯದಲ್ಲಿ ಸಾಂಬಾರು ಪದಾರ್ಥ ಬೆಳೆಗಳನ್ನು ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಹಾಗೂ ಬೆಳೆಗಳ ರಫ್ತನ್ನು ಉತ್ತೇಜಿಸಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್ ಪಾರ್ಕ್ನ್ನು (Spice Park) ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.
49. ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು.

ರೇಷ್ಮೆ

50. ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು ಶಿಡ್ಲಘಟ್ಟದಲ್ಲಿರುವ
ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
51. ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹಧನವನ್ನು ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ವಾರ್ಷಿಕ 12 ಕೋಟಿ ರೂ. ಒದಗಿಸಲಾಗುವುದು.
52. ಬೈವೋಲ್ಟೀನ್ ರೇಷ್ಮೆಗೂಡುಗಳಿಗೆ ಪ್ರಸ್ತುತ ನೀಡುತ್ತಿರುವ ಪ್ರೋತ್ಸಾಹಧನವನ್ನು ಪ್ರತಿ ಕಿಲೋಗೆ 10 ರೂ.ನಿಂದ 30 ರೂ.ಗೆ ಹೆಚ್ಚಿಸಲಾಗುವುದು.

*ಪಶುಸಂಗೋಪನೆ*

53. ಈ ಆಯವ್ಯಯದಲ್ಲಿ ಘೋಷಿಸಲಾದ ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಈ ಕೆಳಕಂಡ ಯೋಜನೆಗಳನ್ನು ಜಾರಿಗೊಳಿಸಲಾಗುವುದು;
• ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ 10,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
• ಅಮೃತ ಮಹಲ್/ ಹಳ್ಳಿಕಾರ್/ ಖಿಲಾರಿ ರಾಸುಗಳನ್ನು ಸಂವರ್ಧನೆ ಮಾಡಿ ಉತ್ಕೃಷ್ಟ ಕರುಗಳನ್ನು ಒದಗಿಸಲಾಗುವುದು.
• ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ.6ರ ಬಡ್ಡಿ ಸಹಾಯಧನ ನೀಡಲಾಗುವುದು.
• ಹಂದಿ ಮತ್ತು ಕೋಳಿ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಆಸಕ್ತ ರೈತರಿಗೆ ತರಬೇತಿ ನೀಡುವ ಮೂಲಕ ರೈತರ ಆದಾಯ ಹೆಚ್ಚಿಸಲಾಗುವುದು.
54. ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ಪಾಲಿಕ್ಲಿನಿಕ್ಗಳನ್ನು ತಾಲ್ಲೂಕು ಹಂತಕ್ಕೆ ವಿಸ್ತರಿಸಲು ಕ್ರಮವಹಿಸಲಾಗುವುದು. ಪ್ರಥಮ ಹಂತದಲ್ಲಿ ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ. ಒದಗಿಸಲಾಗುವುದು.
55. ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ
100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು.
56. ರಾಜ್ಯದಲ್ಲಿ ಪರಂಪರಾಗತವಾಗಿ ಕುರಿ/ ಮೇಕೆ ಸಾಕಾಣಿಕೆಯನ್ನು ವಲಸೆ ಮುಖಾಂತರ ಕೈಗೊಳ್ಳುತ್ತಿರುವ ಕುರಿಗಾರರ ಹಿತರಕ್ಷಣೆಗಾಗಿ
ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು:
• ವಲಸೆ ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ ಜಾರಿಗೊಳಿಸಲಾಗುವುದು.
• ಸಂಚಾರಿ ಕುರಿಗಾಹಿಗಳು ಇರುವ ಜಾಗದಲ್ಲೇ ಅವರ ಕುರಿ, ಮೇಕೆಗಳಿಗೆ ಸರ್ಕಾರಿ ವೈದ್ಯರಿಂದ ಲಸಿಕೆ ಹಾಕಲಾಗುವುದು.
• ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.
• ಸಂಚಾರಿ ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಆದ್ಯತೆ ನೀಡಿ ವಿದ್ಯಾರ್ಥಿ ವೇತನ ನೀಡಲಾಗುವುದು.
57. ಪುತ್ತೂರು ಪಶುವೈದ್ಯಕೀಯ ಕಾಲೇಜಿನ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಕಾಲೇಜನ್ನು ಕಾರ್ಯಾರಂಭ ಮಾಡಲಾಗುವುದು.

*ಮೀನುಗಾರಿಕೆ*

58. ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು;
• ಹೊನ್ನಾವರ ತಾಲ್ಲೂಕಿನ ಮಂಕಿ/ ಕಾಸರಕೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ.
• ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ಸ್ಥಾಪನೆ.
• ಆಕ್ವಾ ಪಾರ್ಕ್‌ಗಳ ಸ್ಥಾಪನೆ.
• ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಹೊರ ಬಂದರು ನಿರ್ಮಾಣ.
• ವಿಜಯಪುರದ ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ.
59. ಮತ್ಸ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಕರಾವಳಿಯ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು 1,500 ರೂ.ಗಳಿಂದ 3,000 ರೂ.ಗಳಿಗೆ ಹೆಚ್ಚಿಸಲಾಗುವುದು.
60. ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆಂಬುಲೆನ್ಸ್ ಅನ್ನು
7 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು.
61. 2024-25ನೇ ಸಾಲಿನಲ್ಲಿ 10,000 ವಸತಿರಹಿತ ಮೀನುಗಾರರಿಗೆ
ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುವುದು.
62. ರಾಜ್ಯದಲ್ಲಿನ 16 ಮೀನು ಮರಿ ಉತ್ಪಾದನಾ ಕೇಂದ್ರಗಳ ಉನ್ನತೀಕರಣವನ್ನು ನಬಾರ್ಡ್ ಸಹಯೋಗದೊಂದಿಗೆ
20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು.
63. ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು
6 ಕೋಟಿ ರೂ. ವೆಚ್ಚ ಮಾಡಲಾಗುವುದು.

*ಸಹಕಾರ*

64. ಗ್ರಾಮೀಣ ಆರ್ಥಿಕತೆಯ ಜೀವನಾಡಿಯಾಗಿರುವ ಸಹಕಾರ ವಲಯವನ್ನು ಬಲಪಡಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. 2023-24ನೇ ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗಳಿಗೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ತರ ಕ್ರಮ ತೆಗೆದುಕೊಂಡಿದೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ
27,000 ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿ ಹೊಂದಲಾಗಿದೆ.
65. ಸಹಕಾರಿ ಬ್ಯಾಂಕುಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡಲು
ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;
• ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ 50,000 ರೂ. ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ
7,631 ಕೋಟಿ ರೂ. ಬೆಳೆ ಸಾಲ ಮನ್ನಾ ಮಾಡಲಾಗಿತ್ತು.
ಈ ಯೋಜನೆಯಡಿಯಲ್ಲಿ ಡಿಸಿಸಿ ಬ್ಯಾಂಕುಗಳಿಗೆ ಸುಮಾರು
132 ಕೋಟಿ ರೂ. ಬಿಡುಗಡೆಯಾಗದ ಪರಿಣಾಮವಾಗಿ ಬ್ಯಾಂಕುಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಬೇಕಾಯಿತು. ಆದ್ದರಿಂದ, ಡಿಸಿಸಿ ಬ್ಯಾಂಕುಗಳಿಗೆ ಬಾಕಿ ಇರುವ 132 ಕೋಟಿ ರೂ. ಮೊತ್ತವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
• ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಸುಮಾರು
57,000 ರೈತರಿಗೆ ಅನುಕೂಲವಾಗಲಿದೆ. ಇದರಿಂದ ಡಿಸಿಸಿ/ಪಿಕಾರ್ಡ್ ಬ್ಯಾಂಕುಗಳಿಗೆ 496 ಕೋಟಿ ರೂ.ಗಳಷ್ಟು ಸಾಲ ಮರುಪಾವತಿಯಾಗುವ ನಿರೀಕ್ಷೆಯಿರುವುದರಿಂದ ಬ್ಯಾಂಕುಗಳ ಆರ್ಥಿಕ ಪರಿಸ್ಥಿತಿಯಲ್ಲಿ ಗಣನೀಯ ಸುಧಾರಣೆಯಾಗಲಿದೆ.
ಈ ಉದ್ದೇಶಕ್ಕಾಗಿ 450 ಕೋಟಿ ರೂ. ಅನುದಾನ ಒದಗಿಸಲಾಗುವುದು.
66. ಕರ್ನಾಟಕ ಕೃಷಿ ಬೆಲೆ ಆಯೋಗವು ತನ್ನ ವರದಿಯಲ್ಲಿ 26 ಬೆಳೆಗಳನ್ನು ಕರ್ನಾಟಕದಲ್ಲಿ ಪ್ರಮುಖವಾದವು ಎಂದು ಗುರುತಿಸಿದ್ದು, ಇವುಗಳಲ್ಲಿ 1೬ಕ್ಕೆ ಮಾತ್ರ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತಿದೆ. ಆದ್ದರಿಂದ ಕರ್ನಾಟಕ ರಾಜ್ಯದ ಇತರ ಪ್ರಮುಖ ಬೆಳೆಗಳಾದ ಅಡಿಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು.
67. ಕೃಷಿ ತಜ್ಞ ಎಂ.ಎಸ್.ಸ್ವಾಮಿನಾಥನ್‌ ಅವರಿಗೆ ಭಾರತ ರತ್ನ ನೀಡಿರುವುದು ಸಂತೋಷದ ವಿಷಯ. ಅವರ ಅಧ್ಯಕ್ಷತೆಯ ಸಮಿತಿ ವರದಿ ಶಿಫಾರಸು ಮಾಡಿದಂತೆ ಕನಿಷ್ಠ ಬೆಂಬಲ ಬೆಲೆಯನ್ನು ವ್ಯವಸಾಯಕ್ಕೆ ತಗಲುವ ವೆಚ್ಚ ಮತ್ತು ಶೇ.50 ರಷ್ಟು ಲಾಭಾಂಶ ಆಧಾರದಡಿ ನಿಗದಿ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.
68. ಮಾಧ್ಯಮಿಕ, ಫೆಡರಲ್ ಹಾಗೂ ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಾತಿ ತರಲು ಅಧಿನಿಯಮಗಳಿಗೆ ತಿದ್ದುಪಡಿ ತರಲಾಗುವುದು.
69. ಕೃಷಿ ಉತ್ಪನ್ನ ಸಂಸ್ಕರಣೆ, ಮಾರುಕಟ್ಟೆ ಸಂಪರ್ಕ ಮತ್ತು ಮೌಲ್ಯವರ್ಧನೆಯಲ್ಲಿಯೂ ಸಹಕಾರ ವಲಯವು ಪ್ರಮುಖ ಪಾತ್ರ ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷಿ ಮಾರಾಟ ಇಲಾಖೆಯ ಮೂಲಕ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;
• ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ ಹಾಗೂ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ
ಒಟ್ಟು 50 ಕೋಟಿ ರೂ. ವೆಚ್ಚದಲ್ಲಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ ತಲಾ 40 ಕೋಟಿ ರೂ. ವೆಚ್ಚದಲ್ಲಿ ಶೀತಲಗೃಹಗಳನ್ನು ನಿರ್ಮಿಸಲಾಗುವುದು.
• ರಾಯಚೂರಿನಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಮತ್ತು ರಾಣೆಬೆನ್ನೂರಿನಲ್ಲಿ 112 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಪ್ರಾರಂಭಿಸಲಾಗುವುದು.
• ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ
35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣವನ್ನು ಸ್ಥಾಪಿಸಲಾಗುವುದು.
• ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಎಲ್ಲಾ ಕಾರ್ಯ ಚಟುವಟಿಕೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟೈಜ಼್ ಮಾಡಲಾಗುವುದು.
• ಬೆಂಗಳೂರಿನ ದಾಸನಪುರ, ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಳಗಾವಿಯ ಮಾರುಕಟ್ಟೆಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ
Bio CNG Plant ಸ್ಥಾಪಿಸುವ ಮೂಲಕ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲಾಗುವುದು.
• ಎ.ಪಿ.ಎಂ.ಸಿ ಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ Charging ಕೇಂದ್ರಗಳನ್ನು ಹಾಗೂ ಪೆಟ್ರೋಲ್ ಬಂಕ್ಗಳನ್ನು
PPP ಮಾದರಿಯಲ್ಲಿ ಸ್ಥಾಪಿಸಲು ಒತ್ತು ನೀಡಲಾಗುವುದು.
70. ಎ.ಪಿ.ಎಂ.ಸಿ ಗಳನ್ನು ಬಲಪಡಿಸುವ ಮೂಲಕ ರೈತರಿಗೆ ತಮ್ಮ ಬೆಳೆಗಳಿಗೆ ಉತ್ತಮ ಆದಾಯ ಗಳಿಸಲು ನೆರವಾಗಲು ಈ ಕೆಳಕಂಡ ಕ್ರಮಗಳನ್ನು ಪ್ರಸ್ತಾಪಿಸಿದೆ;
• ರೈತ ವಿರೋಧಿ ಎ.ಪಿ.ಎಂ.ಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವ ವಿಧೇಯಕಕ್ಕೆ ವಿಧಾನ ಸಭೆಯ ಅಂಗೀಕಾರ ಪಡೆಯಲಾಗಿದ್ದು, ವಿಧಾನ ಪರಿಷತ್ತಿನಲ್ಲಿ ಸದನ ಸಮಿತಿಯ ಪರಿಶೀಲನೆಗೆ ಒಪ್ಪಿಸಲಾಗಿದೆ. ಸದರಿ ವಿಧೇಯಕಕ್ಕೆ ಶೀಘ್ರದಲ್ಲಿಯೇ ಅಂಗೀಕಾರ ಪಡೆಯಲು ಕ್ರಮವಹಿಸಲಾಗುವುದು.
• ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಮಾರುಕಟ್ಟೆ ಸಮಿತಿಗಳಿಗೆ ಅನುದಾನ ಒದಗಿಸಲು ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಸಮಿತಿಗಳಿಂದ ವಂತಿಗೆಯನ್ನು ಪಡೆಯುವ ಮೂಲಕ ಮಾರುಕಟ್ಟೆ ಅಭಿವೃದ್ಧಿ ಸಹಾಯ ನಿಧಿ ಸ್ಥಾಪಿಸಲು ಕಾನೂನು ರಚಿಸಲಾಗುವುದು.
• ಬೆಂಬಲ ಬೆಲೆ ಯೋಜನೆ ಜಾರಿಗೆ ಶಾಸನಾತ್ಮಕ ಬೆಂಬಲ ನೀಡಲು ಕ್ರಮವಹಿಸಲಾಗುವುದು.
71. ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹಿತ ಕಾಯಲು ಮತ್ತು ತೂಕದಲ್ಲಾಗುವ ಮೋಸ ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳ ಬಳಿ Weigh Bridge ಗಳನ್ನು ಎ.ಪಿ.ಎಂ.ಸಿ. ಗಳ ಮೂಲಕ ಸ್ಥಾಪಿಸಲಾಗುವುದು.
72. ಕರ್ನಾಟಕ ಉಗ್ರಾಣ ನಿಗಮವು ತೀವ್ರ ಹಣಕಾಸು ಹಾಗೂ ಆಡಳಿತಾತ್ಮಕ ಬಿಕ್ಕಟ್ಟು ಎದುರಿಸುತ್ತಿದ್ದು, ನಾವು ಅಧಿಕಾರಕ್ಕೆ ಬಂದ ನಂತರ 4.54 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ 76 ಗೋದಾಮುಗಳ ನಿರ್ಮಾಣ ಪೂರ್ಣಗೊಳಿಸಲು 376 ಕೋಟಿ ರೂ. ಗಳ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗಿದೆ.
73. ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಬಳಕೆಯಾಗದೇ ಇರುವ ಉಗ್ರಾಣಗಳ ಸಾಮರ್ಥ್ಯ ಬಳಸಿ ಪಿಪಿಪಿ ಮಾದರಿಯಲ್ಲಿ ಶೀತಲಗೃಹಗಳನ್ನು ಸ್ಥಾಪಿಸಲಾಗುವುದು.

*ಜಲಸಂಪನ್ಮೂಲ*

74. ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕಾಗಿ ಒಂದು ಪ್ರತ್ಯೇಕ ಯೋಜನಾ ವಿಭಾಗವನ್ನು ಹಾಗೂ 2 ಉಪ ವಿಭಾಗಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಈ ಯೋಜನೆಯಡಿ ಮುಳುಗಡೆಯಾಗುವ ಭೂಮಿಯನ್ನು ಗುರುತಿಸುವ ಸರ್ವೆ ಹಾಗೂ ಮರಗಳ ಎಣಿಕೆ ಪ್ರಕ್ರಿಯೆಯನ್ನು ಚಾಲನೆಗೊಳಿಸಿದ್ದು ಉಳಿದ ಅಗತ್ಯ ತೀರುವಳಿಗಳನ್ನು ಸಕ್ಷಮ ಪ್ರಾಧಿಕಾರಗಳಿಂದ ಪಡೆದು ಶೀಘ್ರವಾಗಿ ಪ್ರಾರಂಭಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು.
75. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ದೊಡ್ಡನಗರದ ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ವ ಪರೀಕ್ಷಾರ್ಥವಾಗಿ (Pre-Commissioning Test) ನೀರು ಹರಿಸಿ ಚಾಲನೆಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಯೋಜನೆಯ ಎಲ್ಲಾ ಲಿಫ್ಟ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರುತ್ವ ಕಾಲುವೆಗೆ ನೀರು ಹರಿಸಲಾಗುವುದರ ಜೊತೆ ಸಮತೋಲನಾ ಜಲಾಶಯದ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು.
76. ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಯೋಜನೆಯಡಿಯ
ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಹಾಗೂ ಇದರಡಿ ಭೂಸ್ವಾಧೀನ ಮತ್ತು ಪುನರ್ ವಸತಿ ಹಾಗೂ ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಕೃಷ್ಣಾ ನ್ಯಾಯಾಧಿಕರಣ-2ರ ಅಂತಿಮ ತೀರ್ಪಿನ ಬಾಕಿಯಿರುವ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದರೊಂದಿಗೆ ಅಗತ್ಯವಿರುವ ಕಾನೂನಾತ್ಮಕ ಕ್ರಮಗಳನ್ನು ಮುಂದುವರೆಸಲಾಗುವುದು.
77. ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ತನ್ನ 2023-24ನೇ ಸಾಲಿನ ಆಯವ್ಯಯದಲ್ಲಿ 5,300 ಕೋಟಿ ರೂ. ಅನುದಾನ ಘೋಷಿಸಿಲಾಗಿತ್ತು. ಆದರೆ ಈವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿರುವುದಿಲ್ಲ. ಹಾಗೆಯೇ ಹಿಂದಿನ ರಾಜ್ಯ ಸರ್ಕಾರ ತನ್ನ ಆಯವ್ಯಯ ಘೋಷಣೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾನ್ಯತೆ ನೀಡಲಾಗುತ್ತಿರುವುದರಿಂದ ಮಾನ್ಯ ಪ್ರಧಾನಮಂತ್ರಿಗಳಿಗೆ ಅಭಿನಂದನೆಗಳನ್ನು ತಿಳಿಸಲಾಗಿತ್ತು, ಆದರೆ ಈವರೆಗೆ ರಾಷ್ಟ್ರೀಯ ಯೋಜನೆಯಾಗಿ ಕೇಂದ್ರ ಸರ್ಕಾರವು ಘೋಷಿಸದೆ ಇರುವುದರಿಂದ ಇದು ಹುಸಿಯಾದ ಘೋಷಣೆಯಾಗಿದೆ. ಪ್ರಸಕ್ತ ಸಾಲಿನಲ್ಲಿ
ಈ ಯೋಜನೆಯಡಿ ರಾಜ್ಯ ಸರ್ಕಾರವು ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸಲು ಯೋಜಿಸಿದ್ದು, ಆಯವ್ಯಯದಲ್ಲಿ ಘೋಷಿಸಿದಂತೆ ಅನುದಾನವನ್ನು ಬಿಡುಗಡೆ ಮಾಡಿ ಯೋಜನೆಯನ್ನು ರೈತರಿಗೆ ತಲುಪಿಸಲು ಸಹಕಾರಿಯಾಗುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.
78. ಕಳಸಾ ಮತ್ತು ಬಂಡೂರಾ ನಾಲಾ ತಿರುವು ಯೋಜನೆಗಳಡಿ
3.9 TMC ನೀರಿನ ಬಳಕೆಗಾಗಿ ವಿವರವಾದ ಯೋಜನಾ ವರದಿಗಳಿಗೆ ಕೇಂದ್ರ ಜಲ ಆಯೋಗದ ತೀರುವಳಿ ದೊರಕಿದ್ದು, ಪ್ರಸ್ತುತ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅರಣ್ಯ ತೀರುವಳಿ ನಿರೀಕ್ಷಿಸಿ
ರಾಜ್ಯ ಸರ್ಕಾರವು ಟೆಂಡರ್ ಪ್ರಕ್ರಿಯೆಯನ್ನು ಚಾಲನೆಗೊಳಿಸಲಾಗಿರುತ್ತದೆ. ಆದರೆ ಈ ನಡುವೆ ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಅರಣ್ಯ ತೀರುವಳಿಯನ್ನು ಅನುಮೋದಿಸದೇ ಮುಂದೂಡಲಾಗಿರುತ್ತದೆ.
79. ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ಉಂಟಾಗಿರುವ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಜಲಾಶಯ ವ್ಯಾಪ್ತಿಯಲ್ಲಿನ ರೈತರ ಬಹುದಿನದ ಬೇಡಿಕೆಯಾದ ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯ 15,600 ಕೋಟಿ ರೂ. ಮೊತ್ತದ ವಿವರವಾದ ಯೋಜನಾ ವರದಿ ಸಿದ್ಧವಾಗಿದ್ದು, ಸದರಿ ಯೋಜನೆಯ ಅನುಷ್ಠಾನ ಸಂಬಂಧ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಕ್ರಿಯೆ ಚಾಲನೆಗೊಳಿಸಿದ್ದು, ಯೋಜನೆ ಕಾರ್ಯಗತಗೊಳಿಸಲು ಆದ್ಯತೆ ನೀಡಲಾಗುವುದು.
80. ಪ್ರತಿಷ್ಠಿತ ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಿಸುವ ಯೋಜನೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು.
81. ಧಾರವಾಡದಲ್ಲಿರುವ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯನ್ನು (ವಾಲ್ಮಿ) ಪ್ರಸಕ್ತ ಸಾಲಿನಲ್ಲಿ Centre of Excellence in Water Management ಆಗಿ ಉನ್ನತೀಕರಿಸಲಾಗುವುದು.
82. ಪಾವಗಡ ಸೋಲಾರ್ ಪಾರ್ಕ್ ಮಾದರಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಮಾಲೀಕತ್ವವಿರುವ ಜಮೀನಿನಲ್ಲಿ ಮತ್ತು ಜಲಾಶಯಗಳ ಹಿನ್ನೀರಿನಲ್ಲಿ ಸೂಕ್ತ ಮಾದರಿಯ ಸೋಲಾರ್ ಪಾರ್ಕ್ಗಳನ್ನು ಸ್ಥಾಪಿಸುವ ಯೋಜನೆಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು.
83. ಪ್ರಗತಿಯಲ್ಲಿರುವ ಏತ ನೀರಾವರಿ ಯೋಜನೆಗಳಾದ
ಬೂದಿಹಾಳ್-ಪೀರಾಪುರ ಹಂತ-1, ಶ್ರೀ ವೆಂಕಟೇಶ್ವರ ಹಾಗೂ ಕೆಂಪವಾಡ ಬಸವೇಶ್ವರ ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ಮುಂಡಗೋಡ, ತುಪರೀಹಳ್ಳ, ಸಾಸಿವೆಹಳ್ಳಿ, ದೇವದುರ್ಗ ಮತ್ತು ಗುರುಮಿಠಕಲ್ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.
84. ಪ್ರಗತಿಯಲ್ಲಿರುವ ಹೇಮಾವತಿ ಯೋಜನೆ ವೈನಾಲೆಯಡಿ 5.45 ಕಿ.ಮೀ ಉದ್ದದ ಹಾಗೂ ತುಮಕೂರು ಶಾಖಾ ನಾಲೆಯಡಿ 166.90 ಕಿ.ಮೀ. ಉದ್ದದ ನಾಲೆಯ ಆಧುನೀಕರಣ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. ಇದರಿಂದ ನೀರಿನ ಬಳಕೆಯ ದಕ್ಷತೆಯು ವೃದ್ಧಿಸಲಿದೆ.
85. ಕರ್ನಾಟಕ ನೀರಾವರಿ ನಿಗಮದಡಿ ಏತ ನೀರಾವರಿ ಯೋಜನೆಗಳಾದ ಕಲಬುರಗಿಯ ಯಡಳ್ಳಿ ಹಾಗೂ ತೆರ್ನಳ್ಳಿ, ಉಡುಪಿ ಜಿಲ್ಲೆಯ ಸ್ವರ್ಣ ಹಾಗೂ ಸಿದ್ದಾಪುರ, ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ-ಹಲಗಲಿ, ಸಸಾಲಟ್ಟಿ-ಶಿವಲಿಂಗೇಶ್ವರ, ಶಿರೂರು, ಹನವಾಳ, ಬೆಳಗಾವಿಯ ಜಿಲ್ಲೆಯ ಅಥಣಿ-ಕೊಟ್ಟಲಗಿ-ಅಮ್ಮಾಜೇಶ್ವರಿ, ಶ್ರೀ ಚನ್ನವೃಷಭೇಂದ್ರ, ಮಹಾಲಕ್ಷ್ಮಿ, ಸತ್ತಿಗೇರಿ, ಮಾರ್ಕಂಡೇಯ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಹಳೆಯ ಏತ ನೀರಾವರಿ ಯೋಜನೆಗಳ ಪುನಶ್ಚೇತನ ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ರಾಯಚೂರು ಜಿಲ್ಲೆಯ ಗುಂಜಳ್ಳಿ, ಕಲಬುರಗಿ ಜಿಲ್ಲೆಯ ಆಳಂದ, ಬೀದರ್ ಜಿಲ್ಲೆಯ ಔರಾದ್, ಬೆಳಗಾವಿ ಜಿಲ್ಲೆಯ ಅರಬಾವಿ, ಹಿರೆಬಾಗೇವಾಡಿ, ಸಂತಿ ಬಸ್ತವಾಡ, ಕಾಗವಾಡ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಕಿರವತ್ತಿ, ಗದಗ ಜಿಲ್ಲೆಯ ಜಾಲವಾಡಗಿ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ 7,280 ಕೋಟಿ ರೂ. ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು. ಪ್ರಸ್ತಾಪಿತ ಯೋಜನೆಗಳಿಂದ ಬಾಧಿತ ಅಚ್ಚುಕಟ್ಟು ಪ್ರದೇಶವೂ ಒಳಗೊಂಡಂತೆ 97,698 ಹೆಕ್ಟರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ.
86. ಕೃಷ್ಣಾ ಭಾಗ್ಯ ಜಲ ನಿಗಮದಡಿ ಏತ ನೀರಾವರಿ ಯೋಜನೆಗಳಾದ ಬಾಗಲಕೋಟೆ ಜಿಲ್ಲೆಯ ಕೆರೂರು, ವಿಜಯಪುರ ಜಿಲ್ಲೆಯ ಹೊರ್ತಿ-ರೇವಣಸಿದ್ದೇಶ್ವರ, ಚಿಮ್ಮಲಗಿ, ಮುಳವಾಡ, ಯಾದಗಿರಿ ಜಿಲ್ಲೆಯ ಭೀಮಾ ಪ್ಲಾಂಕ್, ಪ್ರಸಕ್ತ ಸಾಲಿನಲ್ಲಿ 3,779 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಗಳಿಂದ ಬಾಧಿತ ಅಚ್ಚುಕಟ್ಟು ಪ್ರದೇಶವೂ ಒಳಗೊಂಡಂತೆ 1,09,350 ಹೆಕ್ಟರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ.
87. ಕೊಪ್ಪಳ ಜಿಲ್ಲೆಯ ಯಲಬುರ್ಗಾ-ಕುಕನೂರು ತಾಲ್ಲೂಕಿನ 38 ಕೆರೆಗಳನ್ನು ಕುಡಿಯುವ ನೀರು ಹಾಗೂ ಅಂತರ ಜಲ ಅಭಿವೃದ್ಧಿಗಾಗಿ ಕೆರೆ ತುಂಬಿಸುವ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ 970 ಕೋಟಿ ರೂ. ಅಂದಾಜು ಮೊತ್ತದಲ್ಲಿ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪ್ರದೇಶಗಳಿಗೆ ನಾರಾಯಣಪುರ ಬಲದಂಡೆ ಕಾಲುವೆಯಿಂದ ಅಂದಾಜು 990 ಕೋಟಿ ರೂ. ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು.
88. ಕಾವೇರಿ ನೀರಾವರಿ ನಿಗಮದಡಿ ವಿಶ್ವೇಶ್ವರಯ್ಯ ನಾಲಾ ಜಾಲದ ಹೆಬ್ಬಕವಾಡಿ, ನಿಡಘಟ್ಟ, ತುರುಗನೂರು, ಮಳವಳ್ಳಿ ತಾಲ್ಲೂಕಿನ ಮಾದವಮಂತ್ರಿ ನಾಲೆಗಳ ಹಾಗೂ ಮದ್ದೂರು ತಾಲ್ಲೂಕು ಕೆಮ್ಮಣ್ಣುನಾಲಾ ಆಧುನೀಕರಣ, ಹುಣಸೂರು ತಾಲ್ಲೂಕಿನ ಮರದೂರು, ಕನಕಪುರದ ಹೆಗ್ಗನೂರು ಕೆರೆ ತುಂಬಿಸುವ ಯೋಜನೆಗಳು, ಶ್ರೀರಂಗ ಕುಡಿಯುವ ನೀರು ಯೋಜನೆಗೆ ಪೈಪ್ಲೈನ್ ಮೂಲಕ ನೀರು ಒದಗಿಸುವ ಯೋಜನೆ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಾಲೆಗಳ ಅಭಿವೃದ್ಧಿ, ಗುಬ್ಬಿಯ ಮಠದಹಳ್ಳಿ ಕುಡಿಯುವ ನೀರು ಯೋಜನೆ, ರಾಮನಗರದ ಬಳಿ ಅರ್ಕಾವತಿ River Front Development ಯೋಜನೆಗಳನ್ನು ಅಂದಾಜು 2,000 ಕೋಟಿ ರೂ. ಮೊತ್ತದಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು.
89. ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ 365 ಕೋಟಿ ರೂ. ಮೊತ್ತದ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು.
90. ಧಾರವಾಡ ಜಿಲ್ಲೆಯಲ್ಲಿ ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ವಿಪತ್ತು ಉಪಶಮನ ನಿಧಿಯಿಂದ (SDMF) ಯೋಜನೆ ರೂಪಿಸಲಾಗುವುದು.

*ಸಣ್ಣ ನೀರಾವರಿ*

91. ಮಳೆಯ ಕೊರತೆಯಿಂದಾಗಿ ಸಣ್ಣ ನೀರಾವರಿ ಕೆರೆಗಳ ವಿನ್ಯಾಸಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರು ದೊರೆಯುತ್ತಿಲ್ಲ. ಅಲ್ಲದೆ, ಕುಡಿಯುವ ನೀರಿಗೂ ತೊಂದರೆಯಾಗುತ್ತಿದೆ. ಇಂತಹ ಕೆರೆಗಳನ್ನು ಸಮೀಪದ ಜೀವನದಿಗಳಿಂದ ತುಂಬಿಸಲು ಯೋಜನೆಗಳನ್ನು ಕೈಗೊಳ್ಳಲು ಗಣನೀಯ ಪ್ರಮಾಣದ ವೆಚ್ಚ ಮಾಡಲಾಗಿದೆ.
ಈ ಯೋಜನೆಗಳಿಂದಾಗಿ ಸ್ಥಳೀಯ ಅಂತರ್ಜಲ ಮಟ್ಟದ ವಸ್ತುಸ್ಥಿತಿ, ಸುತ್ತಲಿನ ರೈತರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗಳ ಆಧಾರದಲ್ಲಿ ಮೌಲ್ಯಮಾಪನ ಕಾರ್ಯ ಕೈಗೊಳ್ಳಲಾಗುವುದು.
92. ಕುಡಿಯುವ ನೀರು, ಕೃಷಿ ಹಾಗೂ ಕೈಗಾರಿಕೆಗಳಿಗೆ ನೀರನ್ನು ಸಮರ್ಪಕವಾಗಿ ಪೂರೈಸಲು ಕೆರೆಗಳ ಅಭಿವೃದ್ಧಿ, ಚೆಕ್ ಡ್ಯಾಂ ಮತ್ತು ಬ್ರಿಡ್ಜ್ ಕಂ ಬ್ಯಾರೇಜ್ ನಂತಹ 115 ಕಾಮಗಾರಿಗಳನ್ನು
200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು.
93. ಪ್ರಗತಿಯಲ್ಲಿರುವ 455 ಕೋಟಿ ರೂ. ಮೊತ್ತದ ಕೆ.ಸಿ ವ್ಯಾಲಿ
2ನೇ ಹಂತದ ಉದ್ದೇಶಿತ 272 ಕೆರೆ ತುಂಬಿಸುವ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.
94. ರಾಯಚೂರು ಜಿಲ್ಲೆಯ ಚಿಕ್ಕಲಪರ್ವಿ ಹತ್ತಿರ ತುಂಗಭದ್ರಾ ನದಿಗೆ ಬಿ.ಸಿ.ಬಿ ನಿರ್ಮಾಣ, ಮಾನ್ವಿ ತಾಲ್ಲೂಕಿನ ಕುರ್ಡಿ ಕೆರೆ ತುಂಬಿಸುವ ಯೋಜನೆ, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕೆಸ್ತೂರು ಕೊಪ್ಪಲು ಏತ ನೀರಾವರಿ, ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದ ಬಳಿ ಏತ ನೀರಾವರಿ, ಚಿತ್ತಾಪುರ ತಾಲ್ಲೂಕಿನ ಕೆರೆ ತುಂಬಿಸುವ ಯೋಜನೆ, ಸೊರಬ ತಾಲ್ಲೂಕಿನ ವರದಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್, ಜೇವರ್ಗಿ ತಾಲ್ಲೂಕಿನಲ್ಲಿ ಬಾಂದಾರು ಹಾಗೂ ಕೆರೆ ತುಂಬಿಸುವ ಕಾಮಗಾರಿ ಮತ್ತು ಕುಕನೂರು ಹಾಗೂ ಯಲಬುರ್ಗಾ ತಾಲ್ಲೂಕಿನಲ್ಲಿ ಕೆರೆ/ ಬ್ರಿಡ್ಜ್ ಕಂ ಬ್ಯಾರೇಜ್ ಯೋಜನೆಗಳನ್ನು 8೫0 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗುವುದು.

*ಶಾಲಾ ಶಿಕ್ಷಣ ಮತ್ತು ಸಾಕ್ಷರತೆ*

ಶಾಲೆಯ ಮಕ್ಕಳಿಗೆ ನಮ್ಮ ರಾಷ್ಟ್ರಧರ್ಮ ಯಾವುದು ಎಂದು ಕೇಳಿದರೆ, ಭಾವೈಕ್ಯತೆಯೇ, ಸಾಮರಸ್ಯವೇ, ಪ್ರಜಾಪ್ರಭುತ್ವವೇ ನಮ್ಮ ರಾಷ್ಟ್ರಧರ್ಮ ಎಂದು ಹೇಳಿ. ಸಂವಿಧಾನವೇ ರಾಷ್ಟ್ರೀಯ ಗ್ರಂಥ ಎಂದು ನಮ್ಮ ಮಕ್ಕಳಿಗೆ ಹೇಳಿಕೊಡಿ.
– ಪದ್ಮಶ್ರೀ ಇಬ್ರಾಹಿಂ ಸುತಾರ
95. ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಲು ನಮ್ಮ ಸರ್ಕಾರ
ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, 2023-24ನೇ ಸಾಲಿನಲ್ಲಿ
600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿರುತ್ತದೆ. 2024-25ನೇ ಸಾಲಿನಲ್ಲಿ ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳನ್ನು 850 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
96. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ವಿಶೇಷ ಆಸಕ್ತಿ ವಹಿಸಿದೆ. ಸರ್ಕಾರಿ ಶಾಲೆಯ ಮಕ್ಕಳೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕೆಂಬ ಆಶಯದೊಂದಿಗೆ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು;
• ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.
• 3 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮರ್ಥ್ಯ ಹೆಚ್ಚಿಸಲು
J-PAL ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
• ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುವುದು.
• ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್ ಅಡಿಯಲ್ಲಿ ಒದಗಿಸಲು 50 ಕೋಟಿ ರೂ. ಮೀಸಲಿಡಲಾಗುವುದು.
• 2,000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು.
97. ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ-ಕೇಂದ್ರಗಳನ್ನಾಗಿ ರೂಪಿಸಲು ನಾವು-ಮನುಜರು ಎಂಬ ಹೆಸರಿನಲ್ಲಿ ಎಲ್ಲಾ
ಶಾಲಾ-ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ವಿಚಾರ-ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು.
98. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು.
99. ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿರುವ ಆಯ್ದ 100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ
10 ಕೋಟಿ ರೂ. ವೆಚ್ಚದಲ್ಲಿ ಗಣಕ ವಿಜ್ಞಾನ ಸಂಯೋಜನೆಯನ್ನು ಪ್ರಾರಂಭಿಸಲಾಗುವುದು.
100. ವಿಜ್ಞಾನ ವಿಷಯಗಳಲ್ಲಿ 400 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಪ್ರಯೋಗಾಲಯಗಳನ್ನು ಉನ್ನತೀಕರಿಸಲು ತಲಾ 10 ಲಕ್ಷ ರೂ. ನಂತೆ ಅನುದಾನ ಒದಗಿಸಲಾಗುವುದು.
101. ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು
20,000 ವಿದ್ಯಾರ್ಥಿಗಳಿಗೆ NEET/JEE/CET ತರಬೇತಿ ಕಾರ್ಯಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
102. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ
ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ.
103. ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು/ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು.

*ಉನ್ನತ ಶಿಕ್ಷಣ*

104. ಕಳೆದ ಆಯವ್ಯಯದಲ್ಲಿ ಘೋಷಿಸಿರುವಂತೆ, ರಾಜ್ಯದ ಅಸ್ಮಿತೆ ಮತ್ತು ಸಂಸ್ಕೃತಿಗೆ ಅನುಗುಣವಾಗಿ, ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡನ್ನು ಸಿದ್ಧಪಡಿಸಲು ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ರಚಿಸಲಾಗಿದೆ. ಆಯೋಗವು ಶೀಘ್ರದಲ್ಲಿಯೇ ವರದಿಯನ್ನು ಸಲ್ಲಿಸಲಿದ್ದು, ಅದರಂತೆ ಪರಿಶೀಲಿಸಿ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುವುದು.
105. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿನಿಯರ ದಾಖಲಾತಿಯನ್ನು ಹೆಚ್ಚಿಸುವ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸಲು ನಮ್ಮ ಸರ್ಕಾರ ಆದ್ಯತೆ ನೀಡುತ್ತಾ ಬಂದಿದೆ. ಹಿಂದಿನ ಅಧಿಕಾರಾವಧಿಯಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡುವ ಮಹತ್ತರ ತೀರ್ಮಾನವನ್ನು ಕೈಗೊಂಡಿತ್ತು. ಇದೀಗ ಇನ್ನೊಂದು ಹೆಜ್ಜೆ ಮುಂದಿಡುತ್ತಾ ರಾಜ್ಯದ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ಗಳ ಉನ್ನತೀಕರಣಕ್ಕಾಗಿ ಒಟ್ಟು 30 ಕೋಟಿ ರೂ. ಅನುದಾನ ಒದಗಿಸಲಾಗುವುದು.
106. 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಕಾಮಗಾರಿಗಳಿಗೆ
250 ಕೋಟಿ ರೂ. ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳ ಕಾಮಗಾರಿಗಳಿಗೆ 120 ಕೋಟಿ ರೂ. ಅನುದಾನ ಒದಗಿಸಲಾಗುವುದು. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಅಗತ್ಯತೆಗನುಗುಣವಾಗಿ ತುಂಬಲಾಗುವುದು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುವುದು.
107. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ
ಜಿಲ್ಲಾ/ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು.
108. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು (UVCE) 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಸರ್ಕಾರದಿಂದ
100 ಕೋಟಿ ರೂ. ಅನುದಾನ ಒದಗಿಸಲಾಗುವುದು. ಜೊತೆಗೆ ಸಿ.ಎಸ್.ಆರ್.‌ ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲಾಗುವುದು.
109. ಹಳೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿಗೊಳಿಸಲು ಬೇರು-ಚಿಗುರು ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.
110. ಉನ್ನತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ತಮ್ಮ ಆವಿಷ್ಕಾರಗಳಿಗೆ ಪೇಟೆಂಟ್ ಪಡೆದುಕೊಳ್ಳಲು ಅಗತ್ಯವಾದ ತಾಂತ್ರಿಕ ಮತ್ತು ಆರ್ಥಿಕ ನೆರವು ನೀಡಲು 10 ಕೋಟಿ ರೂ.ಗಳ
Corpus Fund ಸ್ಥಾಪಿಸಲಾಗುವುದು.
111. ವಿಷಯ ತಜ್ಞರು, ನಾಗರಿಕ ಸೇವಾ ಅಧಿಕಾರಿಗಳು ಮತ್ತು ಉದ್ಯಮಿಗಳಿಂದ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಎಂಬ ಕಾರ್ಯಕ್ರಮದಡಿ ಮಾರ್ಗದರ್ಶನವನ್ನು (Mentorship) ನೀಡಲಾಗುವುದು.
112. ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡವನ್ನು 54 ಕೋಟಿ ರೂ. ವೆಚ್ಚದಲ್ಲಿ ಹಾಗೂ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಸ್ಟೆಲ್ ಕಟ್ಟಡ ನಿರ್ಮಾಣವನ್ನು
116 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು.

*ಆರೋಗ್ಯ ಮತ್ತು ಕುಟುಂಬ ಕಲ್ಯಾಣ*

113. ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ ೯ ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪಿಸಲಾಗುವುದು.
114. ತಾಲ್ಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.
115. ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು.
116. ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
117. ಗ್ರಾಮೀಣ ಪ್ರದೇಶದ ಜನರಿಗೆ 24×7 ತುರ್ತು ಆರೋಗ್ಯ ಸೇವೆಯನ್ನು ನೀಡಲು ಮುಂದಿನ ೨ ವರ್ಷಗಳಲ್ಲಿ 350 ಕೋಟಿ ರೂ.ಗಳ ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ
15 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮಾನವ ಸಂಪನ್ಮೂಲದೊಂದಿಗೆ ಕಾರ್ಯಗತಗೊಳಿಸಲಾಗುವುದು.
118. ಕಲ್ಯಾಣ ಕರ್ನಾಟಕ ಭಾಗದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ.ಗಳ ವೆಚ್ಚದಲ್ಲಿ KKRDB ಮೂಲಕ ಸ್ಥಾಪಿಸಲಾಗುವುದು.
119. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6,493 ಆರೋಗ್ಯ ಕ್ಷೇಮ
ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 199 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡ ಕಾಮಗಾರಿಗಾಗಿ
130 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು.
120. ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿರುವ ಮಕ್ಕಳ ತಜ್ಞರು, ಮತ್ತು ಕ್ರಿಟಿಕಲ್ ಕೇರ್ ಮೆಡಿಸಿನ್ ತಜ್ಞ ಮತ್ತಿತರ ತಜ್ಞ ವೈದ್ಯರುಗಳ ಸೇವೆಯನ್ನು ಟೆಲಿ-ಐಸಿಯು ವ್ಯವಸ್ಥೆಯ ಮೂಲಕ ತಾಲ್ಲೂಕು ಆಸ್ಪತ್ರೆಗಳಿಗೆ ಒದಗಿಸಲಾಗುವುದು.
121. ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ Chemotherapy ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸಲಾಗುವುದು.
122. ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣಗಳ ಖರೀದಿಗೆ ಒಟ್ಟಾರೆಯಾಗಿ
21 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.
123. ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ Hub and Spoke ಮಾದರಿಯಲ್ಲಿ ವಿಸ್ತರಿಸುವ ಮೂಲಕ STEMI (ತೀವ್ರ ಹೃದ್ರೋಗ) ಚಿಕಿತ್ಸೆಯನ್ನು ಬಲಪಡಿಸಲಾಗುವುದು. ಇದಲ್ಲದೇ STEMI and Stroke ಚಿಕಿತ್ಸೆಗಾಗಿ ಥ್ರಂಬೋಲಿಟಿಕ್ ಔಷಧಗಳ (Thrombolytic Drugs) ಸಂಗ್ರಹಣೆಗಾಗಿ 32 ಕೋಟಿ ರೂ.ಗಳನ್ನು ಒದಗಿಸಲಾಗುವುದು.
124. ರಾಜ್ಯದ ಜಿಲ್ಲಾ ಆಸ್ಪತ್ರೆಗಳನ್ನು ಅಗ್ನಿ ಅವಘಡಗಳಿಂದ ರಕ್ಷಿಸಲು
13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ವ್ಯವಸ್ಥೆಯನ್ನು
6 ಕೋಟಿ ರೂ.ಗಳ ವೆಚ್ಚದಲ್ಲಿ ಅಳವಡಿಸಲಾಗುವುದು.
125. 2025 ರೊಳಗೆ ಕ್ಷಯರೋಗ ನಿರ್ಮೂಲನೆಗೊಳಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ತಪಾಸಣೆಗಾಗಿ
87 True-Nat Machines ಗಳನ್ನು ಖರೀದಿಸಲು
6 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು.
126. ಕಲ್ಯಾಣ ಕರ್ನಾಟಕದಲ್ಲಿ Haemophilia ಮತ್ತು Thalassemia ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯಗಳ ಕೊರತೆಯಿರುವುದರಿಂದ ಕಲಬುರಗಿ ಮತ್ತು ಕೊಪ್ಪಳದ ICDT ಕೇಂದ್ರಗಳ ಬಲವರ್ಧನೆಗೆ
7 ಕೋಟಿ ರೂ.ಗಳನ್ನು ಒದಗಿಸಲಾಗುವುದು.
127. ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ First Referral Unit (FRU) ಗಳಲ್ಲಿ ರಕ್ತ ಸಂಗ್ರಹ ಘಟಕಗಳಿಲ್ಲದ ಕಾರಣ, ರೋಗಿಗಳಿಗೆ ತುರ್ತು ಸಮಯದಲ್ಲಿ ರಕ್ತ ಪೂರೈಸಲು ತೊಂದರೆ ಉಂಟಾಗುತ್ತಿದೆ. ಇದನ್ನು ನೀಗಿಸಲು ೫೦ ಹೊಸ ರಕ್ತ ಶೇಖರಣಾ ಘಟಕಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಸ್ಥಾಪಿಸಲಾಗುವುದು.
128. ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL) ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮತ್ತು 2025-26 ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಯೋಗಾಲಯವನ್ನು (IPHL) ಸ್ಥಾಪಿಸಲಾಗುವುದು. ಇದಲ್ಲದೇ ಪ್ರಸಕ್ತ ಸಾಲಿನಲ್ಲಿ ಹುನಗುಂದ, ಸಿರಾ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಇದಕ್ಕೆ ಒಟ್ಟಾರೆಯಾಗಿ 11 ಕೋಟಿ ರೂ.ಗಳ ಅನುದಾನವನ್ನು ನೀಡಲಾಗುವುದು.
129. ಬೆಂಗಳೂರಿನಲ್ಲಿ ಬಡಜನತೆಗೆ ಉಚಿತ ಪ್ರಯೋಗಾಲಯ ಸೇವೆಯನ್ನು ಒದಗಿಸಲು Hub and Spoke ಮಾದರಿಯಲ್ಲಿ
430 ಪ್ರಯೋಗಾಲಯಗಳ ಸ್ಥಾಪನೆಗೆ ಮುಂದಿನ ಎರಡು ವರ್ಷಗಳಲ್ಲಿ 20 ಕೋಟಿ ರೂ. ಗಳ ಅನುದಾನವನ್ನು ನೀಡಲಾಗುವುದು.
130. ಮಧುಮೇಹ ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಆಯುಷ್ ಚಿಕಿತ್ಸೆ ನೀಡಲು ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದು ಆಯುರ್ವೇದ ಮಧುಮೇಹ ಘಟಕವನ್ನು ಸ್ಥಾಪಿಸಲಾಗುವುದು.
131. ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ 2021ರಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ನೇಮಿಸಿದೆ. ಆಯೋಗವು ನೀಡುವ ವರದಿಯನ್ನಾಧರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

 

*ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ*

146. ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ.

2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ
ಈ ಯೋಜನೆ ಅವಕಾಶ ಕಲ್ಪಿಸಿದೆ.

147. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು.

148. ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು.

. ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.

150. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.

151. Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನವನ್ನು ನೀಡಲಾಗುವುದು.

152. ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲಾ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು Cataract ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗುವುದು.

153. ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

154. ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು.

155. ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವುದು.

156. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು;

• ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು.
• ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗುವುದು.
• ನಿವೇಶನ ಹೊಂದಿರುವ ವಸತಿರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು.
• ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಮರುಸಮೀಕ್ಷೆ ನಡೆಸಲಾಗುವುದು.

157. 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು.

158. ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಹಿಂದುಳಿದ ವರ್ಗಗಳ ಕಲ್ಯಾಣ
178. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ
4 ಕ್ರಮಗಳನ್ನು ಕೈಗೊಳ್ಳಲಾಗುವುದು;
• 100 ಸಂಖ್ಯಾಬಲದ ಮೆಟ್ರಿಕ್‌ ನಂತರದ 75 ಬಾಲಕರ ಮತ್ತು
75 ಬಾಲಕಿಯರ ವಸತಿನಿಲಯಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭಿಸಲಾಗುವುದು.
• ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 100 ಸಂಖ್ಯಾಬಲದ 150 ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ 174 ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ಒದಗಿಸಲಾಗುವುದು.
• ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ವಿದ್ಯಾರ್ಥಿನಿಲಯಗಳಿಗೆ ನಾಲ್ಕು ಕೋಟಿ ರೂ. ಗಳ ಘಟಕ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು.
• ಹಳೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಇಲಾಖೆಯ ವಸತಿ ನಿಲಯಗಳನ್ನು ಅಭಿವೃದ್ಧಿಪಡಿಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.
179. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳನ್ನು ಡಿ.ದೇವರಾಜು ಅರಸು ವಸತಿ ಶಾಲೆಗಳೆಂದು ಮರುನಾಮಕರಣ ಮಾಡಲಾಗುವುದು.
180. ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ CLAT, MAT ಮತ್ತು Chartered Accountant ಫೌಂಡೇಷನ್‌ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.
181. ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್‌ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷಗಳ JEE/NEET ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.
182. ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ಮಾಡಲು ʻಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಆಯೋಗʼ ರಚಿಸಲಾಗುವುದು.
183. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,600 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.

 

ವಸತಿ
199. ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ. ನಮ್ಮ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದ್ದು, 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುತ್ತಿದೆ. 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ವಸತಿರಹಿತರ ಸಂಖ್ಯೆಯನ್ನು ಗುರುತಿಸಲು ಒಂದು ಸಮೀಕ್ಷೆಯನ್ನು ನಡೆಸಲಾಗುವುದು.
200. ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ಎ.ಎಚ್.ಪಿ.) ಅಡಿ 1,18,359 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಹುತೇಕ ಫಲಾನುಭವಿಗಳು ಬಡ ಕುಟುಂಬದವರಾಗಿದ್ದು, ತಮ್ಮ ಪಾಲಿನ ವಂತಿಗೆಯಾದ ಐದು ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದೇ ಯೋಜನೆಯು ಮಂದಗತಿಯಲ್ಲಿ ಸಾಗುತ್ತಿತ್ತು. ಇದನ್ನು ಮನಗಂಡು ನಮ್ಮ ಸರ್ಕಾರವು ಫಲಾನುಭವಿಗಳು ಪಾವತಿಸಬೇಕಾದ ವಂತಿಗೆಯನ್ನು
ಒಂದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಹೆಚ್ಚುವರಿ ನಾಲ್ಕು ಲಕ್ಷ ರೂ.ವರೆಗಿನ ಫಲಾನುಭವಿ ವಂತಿಗೆಯನ್ನು ಭರಿಸಲು ತೀರ್ಮಾನಿಸಿದೆ. ಅದರಂತೆ ಶೀಘ್ರದಲ್ಲಿಯೇ 48,796 ಮನೆಗಳನ್ನು ಪೂರ್ಣಗೊಳಿಸಿ ಕೊಳಗೇರಿ ನಿವಾಸಿಗಳಿಗೆ ಹಸ್ತಾಂತರಿಸಲಾಗುವುದು.
201. ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ವಸತಿ ಇಲಾಖೆಯು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ;
• Asset Monetisation, ವಸತಿ ಸೆಸ್‌ ಮತ್ತು ವಿವಿಧ ಶಾಸನ ಬದ್ಧ ಶುಲ್ಕಗಳನ್ನು ವಿಧಿಸುವ ಮೂಲಕ ಸಂಪನ್ಮೂಲ ಕ್ರೊಢೀಕರಿಸಿ Karnataka Affordable Housing Fund ಅನ್ನು (KAHF) ಸ್ಥಾಪಿಸಲಾಗುವುದು.
• ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್‌ ದರ ಪರಿಷ್ಕರಣೆ ಮಾಡುವುದು.
• ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜಿಸಲಾಗುವುದು.
202. ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರವು ರಿಯಲ್‌ ಎಸ್ಟೇಟ್‌ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಮನೆ ಖರೀದಿದಾರರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. 2023-24 ನೇ ಸಾಲಿನಲ್ಲಿ ಡೆವಲಪರ್‌ಗಳಿಗೆ 40 ಕೋಟಿ ರೂ. ದಂಡ ವಿಧಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ದಕ್ಷ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೂಲಕ ಜನರ ಹಿತರಕ್ಷಣೆಗೆ ಆದ್ಯತೆ ನೀಡಲಾಗುವುದು.

 

*ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು*

203. ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಕನಸಿನೊಂದಿಗೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಉಚಿತ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿತ್ತು. ಈ ಬಾರಿ ನಾವು ನೀಡಿದ್ದ ಭರವಸೆಯಂತೆ ಹೆಚ್ಚುವರಿಯಾಗಿ ಐದು ಕೆ.ಜಿ. ಆಹಾರ ಧಾನ್ಯ ನೀಡಲು ತೀರ್ಮಾನಿಸಲಾಗಿದೆ. ಆದರೆ ಕೇಂದ್ರ ಸರ್ಕಾರದ ಅಸಹಕಾರ ಧೋರಣೆಯಿಂದಾಗಿ ಅಕ್ಕಿ ಲಭ್ಯವಾಗದ ಕಾರಣ, ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿ. ಅಕ್ಕಿಗೆ ೩೪ ರೂ.ನಂತೆ ಪ್ರತಿ ಮಾಹೆ 170 ರೂ. ನೇರ ನಗದು ವರ್ಗಾವಣೆ ಮಾಡುವ ಮೂಲಕ ನಮ್ಮ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ. ಜನವರಿ 2024ರ ಅಂತ್ಯದವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ.

204. ಡಾ|| ಮನ್ಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು 2013 ರಲ್ಲಿ ಜಾರಿಗೆ ತರಲಾಯಿತು. ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಲಾಗುವುದು. ಇದರಿಂದ ಆಹಾರ ಭದ್ರತಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ, ಹಾಗೂ ಹಸಿವು ಮುಕ್ತ ಕರ್ನಾಟಕದ ನಮ್ಮ ಆಶಯವನ್ನು ಈಡೇರಿಸಲು ನೆರವಾಗಲಿದೆ.

205. ಅನ್ನ–ಸುವಿಧಾ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲಿವೆರಿ ಆಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.

*ಕಾರ್ಮಿಕ*

206. ನಮ್ಮ ಸರ್ಕಾರವು ಪ್ಲಾಟ್ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ (Gig Workers) ಬದುಕಿನ ಭದ್ರತೆಗಾಗಿ Platform-Based Gig Workers Fund and Welfare Fee Bill ಎಂಬ ಹೊಸ ವಿಧೇಯಕವನ್ನು ಜಾರಿಗೆ ತರಲಿದೆ. ತನ್ಮೂಲಕ ಅರ್ಹ ಆನ್-ಲೈನ್ ವಹಿವಾಟುಗಳ ಮೇಲೆ ಸೆಸ್ ವಿಧಿಸಿ ಗಿಗ್ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗುವುದು.

207. ಪ್ರಸ್ತುತ ಆಶಾದೀಪ ಯೋಜನೆಯಡಿ ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಸೌಲಭ್ಯವನ್ನು ವಿಸ್ತರಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು;

•ಮಾಲೀಕರಿಗೆ ವರ್ಗಾಯಿಸುವ ಶಿಷ್ಯವೇತನದ ಅವಧಿಯನ್ನು ಆರು ತಿಂಗಳಿನಿಂದ ಒಂದು ವರ್ಷಕ್ಕೆ ಹೆಚ್ಚಿಸಲಾಗುವುದು.
• ಅಪ್ರೆಂಟಿಸ್ ತರಬೇತಿ ಪಡೆದವರನ್ನು ಅದೇ ಮಾಲೀಕರು ಖಾಯಂ ಆಗಿ ನೇಮಕಾತಿ ಮಾಡಿಕೊಂಡಲ್ಲಿ ಮಾಲೀಕರಿಗೆ ವೇತನ ಮರುಪಾವತಿ ಮಾಡುವ ಅವಧಿಯನ್ನು ಒಂದು ವರ್ಷದಿಂದ ಎರಡು ವರ್ಷಗಳ ಅವಧಿಗೆ ಹೆಚ್ಚಿಸಲಾಗುವುದು ಹಾಗೂ ವೇತನದ ಗರಿಷ್ಠ ಮಿತಿಯನ್ನು 6,500 ರಿಂದ 7,000 ರೂ. ಗಳಿಗೆ ಹೆಚ್ಚಿಸಲಾಗುವುದು.
• ಹೊಸದಾಗಿ ಖಾಯಂ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳ ಮಾಸಿಕ 6,000 ರೂ.ಗಳ ಗರಿಷ್ಠ ವೇತನವನ್ನು ಎರಡು ವರ್ಷಗಳವರೆಗೆ ಮಾಲೀಕರಿಗೆ ಮರುಪಾವತಿ ಮಾಡಲಾಗುವುದು.
208. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ವಲಸೆ ಹೋದ ಸಂದರ್ಭದಲ್ಲಿ ಅವರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲು ಆಯ್ದ 10 ಜಿಲ್ಲೆಗಳಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ತಾತ್ಕಾಲಿಕ ವಸತಿ ಸಮುಚ್ಛಯಗಳನ್ನು ನಿರ್ಮಿಸಲಾಗುವುದು.

209. ವಾಣಿಜ್ಯ ಸಾರಿಗೆ ವಾಹನಗಳ ನೋಂದಣಿಯ ಮೇಲೆ ಸುಂಕವನ್ನು ವಿಧಿಸುವ ಮೂಲಕ ಸಾರಿಗೆ ವಾಹನಗಳ ಕಾರ್ಮಿಕರಿಗೆ ಭದ್ರತಾ ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ರೂಪಿಸಲಾಗುವುದು. ಅಲ್ಲದೇ, ವಾಹನ ಚಾಲಕರಿಗೆ ನಿಲ್ದಾಣ/ಹೆದ್ದಾರಿ ಬದಿಯಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲು ಕ್ರಮವಹಿಸಲಾಗುವುದು.

210. ಇ.ಎಸ್.ಐ ಯೋಜನೆಯಡಿ ಒಟ್ಟಾರೆ 311 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳು, Point of Care Mobile Digital Diagnostic Kiosk, Mobile Health Unit, 40 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ ಸಮಗ್ರ ಆರೋಗ್ಯ ತಪಾಸಣೆ, ಎಲ್ಲಾ ವಿಮಾದಾರರಿಗೆ Tetanus ಮತ್ತು Hepatitis ಲಸಿಕೆ ಕಾರ್ಯಕ್ರಮ ಹಾಗೂ ಅತ್ಯಾಧುನಿಕ ರೋಗಪತ್ತೆ ಹಚ್ಚುವ ಕೇಂದ್ರ ಸ್ಥಾಪನೆ ಮುಂತಾದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು.

 

*ಕೌಶಲ್ಯಾಭಿವೃದ್ಧಿ*

211. ನಿರುದ್ಯೋಗಿ ಯುವಜನರಲ್ಲಿ ಭರವಸೆ ತುಂಬಿ, ಉದ್ಯೋಗ ಪಡೆದುಕೊಳ್ಳುವತ್ತ ಬೆಂಬಲ ನೀಡುವ ಯೋಜನೆ ಯುವನಿಧಿ. ಸ್ವಾಮಿ ವಿವೇಕಾನಂದರವರ ಜನ್ಮದಿನವಾದ ರಾಷ್ಟ್ರೀಯ ಯುವ ದಿನಾಚರಣೆದಂದು ಚಾಲನೆಗೊಂಡ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಡಿಬಿಟಿ ಮೂಲಕ ನೆರವು ವರ್ಗಾಯಿಸಲಾಗುತ್ತಿದೆ.

212. ರಾಜ್ಯದ ಮಾನವ ಸಂಪನ್ಮೂಲದ ಸಮರ್ಪಕ ಬಳಕೆ ಮಾಡಲು ಮತ್ತು ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯಮ ಅವಕಾಶಗಳನ್ನು ಒದಗಿಸಲು ರಾಜ್ಯ ಕೌಶಲ್ಯ ನೀತಿಯನ್ನು ಸಿದ್ಧಪಡಿಸಲಾಗುವುದು.

213. ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ನೀಡುತ್ತಿರುವ ಕೋರ್ಸುಗಳಲ್ಲಿ ವಿಷಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು 25,000 ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು. ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗಾಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಯುವಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುವುದು.

214. ಕೈಗಾರಿಕಾ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿಯನ್ನು ಸ್ಥಾಪಿಸಲಾಗುವುದು

215. ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ ಒಟ್ಟು 350 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಮೊದಲನೇ ಹಂತದ ಯೋಜನೆಯನ್ನು ಮೂರು ವರ್ಷಗಳ ಅವಧಿಯಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.

216. ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾ ಖನಿಜ ನಿಧಿಯ ಮೂಲಕ ಹಾಗೂ ಗದಗ ಜಿಲ್ಲೆಯ ರೋಣದಲ್ಲಿ NABARD ಸಹಯೋಗದೊಂದಿಗೆ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿ ಗಳನ್ನು ಪ್ರಾರಂಭಿಸಲಾಗುವುದು.

217. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಮೆಕ್ಯಾಟ್ರಾನಿಕ್ಸ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ರೊಬೊಟಿಕ್ಸ್ ಇತ್ಯಾದಿ ಹೆಚ್ಚುವರಿ ಡಿಪ್ಲೊಮ ಕೋರ್ಸ್ಗಳನ್ನು ವಿವಿಧ ಜಿ.ಟಿ.ಟಿ.ಸಿ ಗಳಲ್ಲಿ
ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಇದರಿಂದ ಹೆಚ್ಚುವರಿಯಾಗಿ 15,000 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

218. ಕಲಬುರಗಿಯ ಕೆ.ಜಿ.ಟಿ.ಟಿ.ಐ.ನಲ್ಲಿ ಸಿ.ಎನ್.ಸಿ (Computer Numerical Control) ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಶ್ರೇಷ್ಠತಾ ಕೇಂದ್ರವನ್ನು 16 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

219. ಐ.ಟಿ.ಐ. ಮತ್ತು ಜಿ.ಟಿ.ಟಿ.ಸಿ. ವಿದ್ಯಾರ್ಥಿಗಳಿಗೆ ಉದ್ಯೋಗ ನಿಯುಕ್ತಿಗೆ ಅನುಕೂಲವಾಗುವಂತೆ ಆಂಗ್ಲ ಮತ್ತು ಸಂವಹನ ಕೌಶಲ್ಯ ತರಬೇತಿಯನ್ನು 5 ಕೋಟಿ ರೂ. ವೆಚ್ಚದಲ್ಲಿ ನೀಡಲಾಗುವುದು. ಇದರಿಂದ ಸುಮಾರು 40,000ಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳಿಗೆ ಪ್ರಯೋಜನವಾಗಲಿದೆ.

220. ಶ್ರೇಷ್ಠತೆ ಮತ್ತು ಉನ್ನತ ಸಾಧನೆಯನ್ನು ಗುರುತಿಸಲು ಮತ್ತು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಯುವ ಪ್ರಶಿಕ್ಷಣಾರ್ಥಿಗಳನ್ನು ಕೌಶಲ್ಯ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ್ಯ ಒಲಿಂಪಿಕ್ಸ್ ಅನ್ನು ಆಯೋಜಿಸಲಾಗುವುದು.

221. ಉದ್ಯೋಗಶೀಲತೆಯನ್ನು ಹೆಚ್ಚಿಸಲು Dual System of Training (DST) ಅನ್ನು ರಾಜ್ಯದ ಎಲ್ಲಾ ಐ.ಟಿ.ಐ ಗಳಲ್ಲಿ ಸ್ಥಳೀಯ ಕೈಗಾರಿಕೆಗಳು ಹಾಗೂ ಉದ್ಯಮಗಳ ಸಹಭಾಗಿತ್ವದಲ್ಲಿ ಹಂತ ಹಂತವಾಗಿ ವಿಸ್ತರಿಸಲಾಗುವುದು.

222. ರಾಜ್ಯದಲ್ಲಿ ಉದ್ಯಮಗಳ ಬೇಡಿಕೆಗೆ ಪೂರಕವಾದ ಉತ್ತಮ ಗುಣಮಟ್ಟದ ಕೌಶಲ್ಯ ಪರಿಸರ ವ್ಯವಸ್ಥೆಯನ್ನು ರಚಿಸುವತ್ತ ಗಮನಹರಿಸಲು ಸ್ಕಿಲ್ ಕನೆಕ್ಟ್ ಸಮಿಟ್ ಅನ್ನು (Skill Connect Summit) ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಆಯೋಜಿಸಲಾಗುವುದು.

223. ಕೆ.ಎಸ್.ಡಿ.ಸಿ ಅಡಿಯಲ್ಲಿ ಸ್ಥಾಪಿಸಲಾಗಿರುವ ಅಂತಾರಾಷ್ಟ್ರೀಯ ವಲಸೆ ಕೋಶದ ಮೂಲಕ ವಿದೇಶಿ ಉದ್ಯೋಗದಾತರೊಂದಿಗೆ ಸಂವಾದಗಳನ್ನು ನಡೆಸಲಾಗುತ್ತಿದೆ. ಸದರಿ ಕೋಶವನ್ನು ಬಲಪಡಿಸಿ ಉದ್ಯೋಗಾಕಾಂಕ್ಷಿಗಳಿಗೆ ಕೌಶಲ್ಯಾಭಿವೃದ್ಧಿ ಹಾಗೂ ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಅಗತ್ಯ ಸಮನ್ವಯ ಕಾರ್ಯಗಳನ್ನು ಕೈಗೊಳ್ಳಲಾಗುವುದು.

224. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲಾ ಸಂಸ್ಥೆಗಳಲ್ಲಿ ನೇಮಕಾತಿಗಾಗಿ ಹೊರಡಿಸಲಾಗುವ ಅಧಿಸೂಚನೆಗಳನ್ನು ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಒಂದೇ ಜಾಲತಾಣದಲ್ಲಿ ಪ್ರಕಟಿಸಲಾಗುವುದು.

225. ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣವನ್ನು ಸಕ್ರಿಯಗೊಳಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ 50,000 ಎಸ್.ಹೆಚ್.ಜಿ. ಮಹಿಳಾ ಸ್ವಾಮ್ಯದ ಸೂಕ್ಷ್ಮ ಉದ್ಯಮಗಳನ್ನು ಎರಡು ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು.

226. IIM-B ಸಹಯೋಗದೊಂದಿಗೆ ಎಲ್ಲಾ 31 ಜಿಲ್ಲೆಗಳಲ್ಲಿ ಉದ್ಯಮಿಗಳನ್ನು ಉತ್ತೇಜಿಸಲು ಜಿಲ್ಲಾ ಮಟ್ಟದ ಇನ್ಕ್ಯುಬೇಶನ್ ಕೇಂದ್ರಗಳನ್ನು (DLIC) ಹಂತ ಹಂತವಾಗಿ ಸ್ಥಾಪಿಸಲಾಗುವುದು. ಮೊದಲನೇ ಹಂತದಲ್ಲಿ ಆಯ್ದ 10 ಜಿಲ್ಲೆಗಳಲ್ಲಿ ಇನ್ಕ್ಯುಬೇಶನ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

227. ಒಂದು ಲಕ್ಷ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಮೀನುಗಾರಿಕೆ, ಕುಕ್ಕುಟ, ಕುರಿ ಮತ್ತು ಮೇಕೆ ಸಾಕಾಣಿಕೆ, ಜೇನು ಸಾಕಾಣಿಕೆ ಸಂಬಂಧಿಸಿದ ಕಿರು ಉದ್ದಿಮೆಗಳನ್ನು ಸ್ಥಾಪಿಸಲು ಮತ್ತು ಅವುಗಳಿಗೆ ಸೂಕ್ತ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸಲು 100 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು.

228. ಕೆಫೆ ಸಂಜೀವಿನಿ ಎಂಬ ಮಹಿಳೆಯರೇ ನಡೆಸುವ ಕ್ಯಾಂಟೀನ್ಗಳನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟಕುವ ದರದಲ್ಲಿ ಒದಗಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 7.5೦ ಕೋಟಿ ರೂ. ವೆಚ್ಚದಲ್ಲಿ 50 ಕೆಫೆಗಳನ್ನು ಸ್ಥಾಪಿಸಲಾಗುವುದು.

229. ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವ-ಸಹಾಯ ಗುಂಪುಗಳ ಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. ಇದರ ಜೊತೆಯಲ್ಲಿ 2500 ಕಾಫಿ ಕಿಯೋಸ್ಕ್ಗಳನ್ನು 25 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಮತ್ತು ಇದರ ಸಂಪೂರ್ಣ ನಿರ್ವಹಣೆಯನ್ನು ಎಸ್.ಹೆಚ್.ಜಿ. ಮಹಿಳೆಯರ ಮೂಲಕ ಮಾಡಲಾಗುವುದು.

230. ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು 5 ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು. ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವ-ಸಹಾಯ ಗುಂಪುಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ವಹಿಸಲಾಗುವುದು.

231. ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸಕ್ರಿಯ ಭಾಗವಹಿಸುವಿಕೆ ಮತ್ತು ನಾಯಕತ್ವದೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದ ಆಡಳಿತ ಬಲಪಡಿಸುವ ಉದ್ದೇಶದಿಂದ GP-SHG ಒಗ್ಗೂಡಿಸುವಿಕೆಯ ನೀತಿಯನ್ನು ಜಾರಿಗೊಳಿಸಲಾಗುವುದು.

*ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್*

232. ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸಲು ಪ್ರಗತಿ ಪಥ ಯೋಜನೆಯನ್ನು ಬಾಹ್ಯ ನೆರವಿನೊಂದಿಗೆ ಪ್ರಾರಂಭಿಸಲಾಗುವುದು. ಈ ಯೋಜನೆ ಅಡಿಯಲ್ಲಿ 189 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ 50 ಕಿ.ಮೀ. ಉದ್ದದ ರಸ್ತೆಗಳಂತೆ, ಒಟ್ಟಾರೆಯಾಗಿ 9,450 ಕಿ.ಮೀ. ಉದ್ದದ ರಸ್ತೆ ಸಂಪರ್ಕ ಜಾಲವನ್ನು 5,200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

233. ಕಲ್ಯಾಣ ಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಮಾದರಿಯಲ್ಲಿ ಒಟ್ಟು 1,150 ಕಿ.ಮೀ. ರಸ್ತೆಗಳನ್ನು 1,000 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

234. ಕರ್ನಾಟಕದಲ್ಲಿ ಗ್ರಾಮ ಪಂಚಾಯತಿಗಳು ಆರೋಗ್ಯ ರಕ್ಷಣೆ, ಘನತ್ಯಾಜ್ಯ ನಿರ್ವಹಣೆ, ಗ್ರಂಥಾಲಯ ನವೀಕರಣ ಮುಂತಾದ ಕ್ಷೇತ್ರಗಳಲ್ಲಿ ನಾಯಕತ್ವದ ಸಾಮರ್ಥ್ಯವನ್ನು ಪ್ರದರ್ಶಿಸಿವೆ. ಈ ದಿಸೆಯಲ್ಲಿ ಗ್ರಾಮ ಪಂಚಾಯಿತಿಗಳನ್ನು ಸಾಮಾಜಿಕ ಕಳಕಳಿಯುಳ್ಳ ಸ್ಪಂದನಾಶೀಲ ಹಾಗೂ ಸಮರ್ಥ ಗ್ರಾಮ ಸರ್ಕಾರಗಳನ್ನಾಗಿ ರೂಪಿಸಲು ಕ್ರಮವಹಿಸಲಾಗುವುದು.

235. ನಮ್ಮ ರಾಜ್ಯ ಎಂದಿನಂತೆ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿದೆ. 2024-25ನೇ ಸಾಲಿನಲ್ಲಿ 16 ಕೋಟಿ ಮಾನವ-ದಿನಗಳನ್ನು ಸೃಜಿಸಿ, ಸುಮಾರು 30 ಲಕ್ಷ ಕುಟುಂಬಗಳಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ. ಪ್ರಮುಖವಾಗಿ ಜಲಾನಯನ ಇಲಾಖೆಯ ಒಗ್ಗೂಡಿಸುವಿಕೆಯೊಂದಿಗೆ 5,000 ಎಕರೆ ಸವಳು-ಜವಳು ಭೂಮಿಯನ್ನು ಸುಧಾರಿಸುವ ಮತ್ತು ಪ್ರತಿ ತಾಲ್ಲೂಕಿಗೆ ಕನಿಷ್ಠ 2ರಂತೆ ಬೂದು ನೀರು ಸಂಸ್ಕರಣಾ ಘಟಕಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ.

236. ಅರಿವು ಕೇಂದ್ರಗಳನ್ನು ಬಲಪಡಿಸುವ ದೃಷ್ಠಿಯಿಂದ 132 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು ಮತ್ತು ಪುಸ್ತಕಗಳು, ಡಿಜಿಟಲ್‌ ಉಪಕರಣಗಳು ಹಾಗೂ ವಿಕಲಚೇತನ ಸ್ನೇಹಿ ಉಪಕರಣಗಳನ್ನು ಖರೀದಿಸಲಾಗುವುದು.

237. ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷ 5 ಉಪ ಕ್ರಮಗಳನ್ನು ಕೈಗೊಳ್ಳಲಿದೆ;

• ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದು.
• ಗ್ರಾಮ ಪಂಚಾಯಿತಿಗಳ ಸಂಪನ್ಮೂಲಗಳನ್ನು ಹೆಚ್ಚಿಸಲು ಗ್ರಾಮ ಪಂಚಾಯಿತಿ ಸ್ವತ್ತುಗಳ Asset Monetisation ನೀತಿಯನ್ನು ಜಾರಿಗೆ ತರಲಾಗುವುದು.
• ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್‌ ಅನ್ನು ಪ್ರಾರಂಭಿಸಲಾಗುವುದು.
• ಸೇವಾ ಸಿಂಧು ಪೋರ್ಟಲ್‌ ಮೂಲಕ ಒದಗಿಸಲಾಗುತ್ತಿರುವ ಎಲ್ಲಾ ಸೇವೆಗಳನ್ನು ಈ ವರ್ಷದಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಪ್ರಾರಂಭಿಸಲಾಗುವುದು.
• ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿಗದಿತ ಶುಲ್ಕ ಪಾವತಿಯೊಂದಿಗೆ ವ್ಯವಹಾರ ಪರವಾನಗಿಗಳ ಸ್ವಯಂಚಾಲಿತ ನವೀಕರಣಕ್ಕೆ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ತರಲಾಗುವುದು.
• ಗ್ರಾಮ ಪಂಚಾಯಿತಿಗಳ ಸಭೆಗಳು ಮತ್ತು ಗ್ರಾಮ ಸಭೆಗಳ ಕಾರ್ಯಕಲಾಪಗಳ ನೇರ ಪ್ರಸಾರ ಮಾಡಲಾಗುವುದು.

238. ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್ ಬಳಕೆಯ ಮೇಲೆ ನಿಗಾವಹಿಸಲು ಹಾಗೂ ವಿದ್ಯುತ್ ವೆಚ್ಚ ಕಡಿಮೆ ಮಾಡಲು ಪ್ರಾಯೋಗಿಕವಾಗಿ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;

• 50 ಗ್ರಾಮ ಪಂಚಾಯಿತಿಗಳಲ್ಲಿ ಹೊಂಬೆಳಕು ಕಾರ್ಯಕ್ರಮದಡಿ 25 ಕೋಟಿ ರೂ.ಗಳ ವೆಚ್ಚದಲ್ಲಿ ಸೋಲಾರ್ ದೀಪಗಳನ್ನು ಅಳವಡಿಸಲಾಗುವುದು;
• 200 ಗ್ರಾಮ ಪಂಚಾಯಿತಿಗಳಲ್ಲಿ ಬೀದಿ ದೀಪಗಳ ವ್ಯವಸ್ಥಿತ ಮೀಟರಿಂಗ್ ಮಾಡಲಾಗುವುದು;

239. ಪ್ರಸಕ್ತ ಸಾಲಿನಿಂದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸ್ಥರ ಸಹಭಾಗಿತ್ವದೊಂದಿಗೆ ಹಿರಿಯ ನಾಗರಿಕರ ಆರೈಕೆ ಮತ್ತು ಚಿಕಿತ್ಸೆಯನ್ನು ನಿರ್ವಹಿಸಲು ಆರೈಕೆ–ಉಪಶಮನ (Palliative Care) ಕೇಂದ್ರಗಳನ್ನು ಪ್ರಾರಂಭಿಸಲಾಗುವುದು.

240. ಪ್ರೇರಣಾ ಕಾರ್ಯಕ್ರಮದಡಿ ಸ್ವಸಹಾಯ ಗುಂಪುಗಳ ಮಹಿಳೆಯರು, ಗ್ರಾಮ ಪಂಚಾಯಿತಿಗಳ ಮಹಿಳಾ ಸದಸ್ಯರು ಹಾಗೂ ಗ್ರಾಮೀಣ ಪ್ರದೇಶದ ಮುಂಚೂಣಿಯ ಕಾರ್ಯಕರ್ತೆಯರಲ್ಲಿ Menstrual Cup ಬಳಕೆಯನ್ನು ಪ್ರೋತ್ಸಾಹಿಸಲಾಗುವುದು. ಇದರ ಮೂಲಕ ಗ್ರಾಮದ ಇತರೆ ಮಹಿಳೆಯರನ್ನು ಇವುಗಳನ್ನು ಬಳಕೆ ಮಾಡಲು ಪ್ರೇರೇಪಿಸಲಾಗುವುದು.

241. ರಾಜ್ಯದ 100 ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುವುದು. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತಲಾ ಒಂದು ಲಕ್ಷ ರೂ. ನೆರವಿನೊಂದಿಗೆ ಎಸ್.ಹೆಚ್.ಜಿ.ಗಳ ಸಹಯೋಗದೊಂದಿಗೆ ಎಣ್ಣೆ ಗಾಣವನ್ನು ಸ್ಥಾಪಿಸಲಾಗುವುದು.

242. ಗ್ರಾಮೀಣ ಪ್ರದೇಶದಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ ಮಟ್ಟದ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟಗಳ ಮೂಲಕ ಕೈಗೊಳ್ಳಲಾಗುತ್ತಿದೆ. ಸದರಿ ವ್ಯವಸ್ಥೆಯನ್ನು ಸುಸ್ಥಿರವಾಗಿ ನಿರ್ವಹಿಸಲು, ತ್ಯಾಜ್ಯವನ್ನು ಕಡಿಮೆ ಮಾಡುವ, ಪುನಃ ಬಳಸುವ ಮತ್ತು ಮರಳಿ ಉಪಯೋಗಿಸುವ ತತ್ವಗಳಾಧಾರಿತ ವರ್ತುಲ ಆರ್ಥಿಕತೆ (Circular Economy) ಮಾದರಿಯನ್ನು ಪ್ರಸಕ್ತ ಸಾಲಿನಿಂದ ಪ್ರೋತ್ಸಾಹಿಸಲಾಗುವುದು.

243. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ಚುನಾಯಿತ ಸದಸ್ಯರಿಗೆ ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಸದಸ್ಯರಿಗೆ ತರಬೇತಿ ನೀಡಲಾಗುವುದು ಹಾಗೂ ದೇಶದ ಪ್ರಪ್ರಥಮ ವರ್ತುಲ ಆರ್ಥಿಕತೆಯ (Circular Economy) ಪ್ರಯೋಗಾಲಯವನ್ನು ಸ್ಥಾಪಿಸಲು ಎರಡು ಕೋಟಿ ರೂ.ಗಳನ್ನು ಒದಗಿಸಲಾಗುವುದು.

244. ಜೀತ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಂಡ ಕಾರ್ಮಿಕರ ಪುನರ್ವಸತಿಗಾಗಿ ನೀಡುವ ಮಾಸಿಕ ಪ್ರೋತ್ಸಾಹಧನವನ್ನು 2,000 ರೂ.ಗಳಿಗೆ ಹೆಚ್ಚಿಸಲಾಗುವುದು. ಈ ಪಿಡುಗಿನ ಪರಿಣಾಮಕಾರಿ ನಿರ್ಮೂಲನೆಗೆ ಪೂರಕವಾಗಿ ಸಂಬಂಧಪಟ್ಟ ಇಲಾಖೆಗಳ ಕ್ಷೇತ್ರಮಟ್ಟದ ಅಧಿಕಾರಿಗಳನ್ನು ಜೀತ ಕಾರ್ಮಿಕ ನಿಷೇಧ ಅಧಿಕಾರಿಗಳಾಗಿ ಅಧಿಸೂಚಿಸಲಾಗುವುದು.

245. ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸರ್ಕಾರದ ಮಾನ್ಯತೆಯುಳ್ಳ ದಾಖಲೆಗಳನ್ನು ಡಿಜಿಲಾಕರ್‌ ಆಪ್‌ನಲ್ಲಿ ಸುರಕ್ಷಿತವಾಗಿರಿಸುವ ಸಲುವಾಗಿ ನನ್ನ ಗುರುತು ಅಭಿಯಾನವನ್ನು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 1,000 ಗ್ರಾಮ ಪಂಚಾಯಿತಿಗಳಲ್ಲಿ ಹಮ್ಮಿಕೊಳ್ಳಲಾಗುವುದು.

246. ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಬೇಕಾದ ಅನುದಾನದ ಸೂತ್ರಗಳ ಬಗ್ಗೆ ಅಧ್ಯಯನ ನಡೆಸಿ, ಸೂಕ್ತ ಶಿಫಾರಸ್ಸು ಮಾಡಲು ೫ನೇ ರಾಜ್ಯ ಹಣಕಾಸು ಆಯೋಗವನ್ನು ರಚಿಸಲಾಗಿದೆ. ಆಯೋಗದಿಂದ ಸ್ವೀಕೃತವಾಗುವ ಶಿಫಾರಸ್ಸುಗಳನ್ನು ನಮ್ಮ ಸರ್ಕಾರವು ಪ್ರಾಮಾಣಿಕವಾಗಿ ಪರಿಶೀಲಿಸುತ್ತದೆ ಮತ್ತು ರಾಜ್ಯದಲ್ಲಿ ಸ್ಥಳೀಯ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು.

*ಯೋಜನೆ*

247. 2024-25 ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲು 5,000 ಕೋಟಿ ರೂ.ಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

248. ಡಾ|| ಡಿ.ಎಂ. ನಂಜುಂಡಪ್ಪ ವರದಿಯನ್ನು 2002 ರಲ್ಲಿ ಸಲ್ಲಿಸಲಾಗಿದ್ದು, ಕಳೆದ 22 ವರ್ಷಗಳಲ್ಲಿ ಈ ವರದಿಯ ಆಧಾರದ ಮೇಲೆ ಹಿಂದುಳಿದ ಪ್ರದೇಶಗಳಲ್ಲಿ ಅಸಮತೋಲನೆಯನ್ನು ನಿವಾರಿಸಲು ಬಹಳಷ್ಟು ಯೋಜನೆಗಳನ್ನು ಮತ್ತು ಬಂಡವಾಳ ಹೂಡಿಕೆಯನ್ನು ಮಾಡಲಾಗಿದೆ. ಇದರಿಂದ ಆಗಿರುವ ಬದಲಾವಣೆಗಳು ಮತ್ತು ಪರಿಣಾಮಗಳನ್ನು ಅಧ್ಯಯನ ಮಾಡಲು ಪ್ರಸಕ್ತ ಸಾಲಿನಲ್ಲಿ ಒಂದು ಉನ್ನತಾಧಿಕಾರಿ ಸಮಿತಿಯನ್ನು ರಚಿಸಲಾಗುವುದು. ಈ ಸಮಿತಿಯ ಮೂಲಕ ಪ್ರಸ್ತುತ ರಾಜ್ಯದಲ್ಲಿನ ಆರ್ಥಿಕ ಮತ್ತು ಪ್ರಾದೇಶಿಕ ಅಸಮಾನತೆಯ ಆಧಾರದ ಮೇಲೆ ಜಿಲ್ಲೆ ಮತ್ತು ತಾಲ್ಲೂಕುಗಳನ್ನು ವರ್ಗೀಕರಿಸಿ ಹೊಸ ಅಭಿವೃದ್ಧಿ ಸೂಚ್ಯಂಕಗಳನ್ನು ತಯಾರಿಸಲಾಗುವುದು.

249. ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ (SITK) ಮೂಲ ಉದ್ದೇಶಗಳನ್ನು ಮತ್ತು ಕಾರ್ಯವನ್ನು ಸೂಕ್ತವಾಗಿ ಬಿಂಬಿಸುವ ನಿಟ್ಟಿನಲ್ಲಿ ಸಂಸ್ಥೆಯ ಹೆಸರನ್ನು ಬದಲಾವಣೆ ಮಾಡಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವೆಂದು (KSPPC) ಪುನರ್ರಚಿಸಲಾಗುವುದು.