ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವಾಭಿಮಾನದ ಹೆಸರಿನಲ್ಲಿ ಪಕ್ಷೇತರವಾಗಿ ನಿಂತು ಗೆದ್ದ ಸುಮಲತಾ‌‌ ಅಂಬರೀಶ್ ಇದೀಗ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.

ಎರಡು ದಿನಗಳ ಹಿಂದೆ ಮಂಡ್ಯದಲ್ಲಿ ಅಭಿಮಾನಿಗಳ ಸಮಾವೇಶ ನಡೆಸಿದ್ದ ಸುಮಲತಾ ಮುಂದಿನ ರಾಜಕೀಯ ನಡೆಯ ಬಗ್ಗೆ ಘೋಷಣೆ ಮಾಡಿದ್ದರು.

ಅದರಂತೆ ಅಧಿಕೃತವಾಗಿ ಶುಕ್ರವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾದರು. ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್.
ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.‌

ಮಂಡ್ಯದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹಿನ್ನಡೆ ಉಂಟು ಮಾಡಿದೆ. ಎನ್ ಡಿ ಎ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡ್ತಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಸುಮಲತಾ ಅಂಬರೀಶ್ ‌ಈ‌ ಹಿಂದೆ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಅವರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆ ಆಗಿರಲಿಲ್ಲ. ಈ ಬಗ್ಗೆ ಪಕ್ಷದ ಕೆಲವು ನಾಯಕರಿಗೂ ಆಕ್ಷೇಪ ಇತ್ತು.

ಇದೇ ಸಂದರ್ಭದಲ್ಲಿ ಮಾಜಿ‌ ಕ್ರಿಕೆಟ್ ಆಟಗಾರ ದೊಡ್ಡ ಗಣೇಶ್, ಮಾಜಿ ಕಾಂಗ್ರೆಸ್ ಮುಖಂಡ ಎಸ್. ಶಿವರಾಮೇಗೌಡ ಹಾಗೂ ಕಾಂಗ್ರೆಸ್ ಪಕ್ಷದ ಕೆಲವು ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ನರೇಂದ್ರ ಮೋದಿ ನಾಯಕತ್ವ ಮೆಚ್ಚಿ ದೇಶದಲ್ಲಿ ಬಿಜೆಪಿ ಪರವಾಗಿ ವಾತಾವರಣ ನಿರ್ಮಾಣವಾಗಿದೆ. 400 ಹೆಚ್ಚು ಸ್ಥಾನಗಳೊಂದಿಗೆ ಎನ್ ಡಿ ಎ ಅಧಿಕಾರಕ್ಕೆ ಬರಬೇಕು ಎಂಬುದು ಸಾಮಾನ್ಯರ ಅಭಿಪ್ರಾಯವಾಗಿದೆ. ಮೋದಿ ಮತ್ತೊಮ್ಮೆ ಎಂಬ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಿದೆ.
ಪರಿಣಾಮವಾಗಿ ಯಾವುದೇ ಸಚಿವರು ಸ್ಪರ್ಧೆಗೆ ಮುಂದಾಗಿಲ್ಲ ಎಂದರು. ಸುಮಲತಾ ಎಲ್ಲಾ ಅನುಮಾನಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ದೇಶದ ಅಭಿವೃದ್ಧಿ ಹಾಗೂ ಸುರಕ್ಷಿತೆ ದೃಷ್ಟಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬ ನಿಟ್ಟಿನಲ್ಲಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ ಎಂದರು. ಸುಮಲತಾ ಸೇರ್ಪಡೆಯಿಂದ ಮಂಡ್ಯಕ್ಕೆ ಮಾತ್ರವಲ್ಲ, ರಾಜ್ಯಕ್ಕೆ ದೊಡ್ಡ ಶಕ್ತಿ ಹಾಗೂ ಸಂದೇಶ ಕೊಟ್ಟಂತಾಗಿದೆ ಎಂದು ಹೇಳಿದರು.