Join The Telegram | Join The WhatsApp |
ಬೆಂಗಳೂರು-
ಗ್ರಾಮೀಣ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆ ʼಯಶಸ್ವಿನಿʼ ಗೆ ಹೆಸರು ನೊಂದಾಯಿಸಲು ಇನ್ನು 4 ದಿನ ಮಾತ್ರ ಬಾಕಿ ಇದೆ. ಕರ್ನಾಟಕದ ರಾಜ್ಯದ ಗ್ರಾಮೀಣ ಸಹಕಾರಿಗಳಿಗಾಗಿಯೇ ರೂಪಗೊಂಡಿರುವ ಈ ಸ್ವಯಂ-ನಿಧಿ ಶಸ್ತ್ರಚಿಕಿತ್ಸಾ ಯೋಜನೆಗೆ ಹೆಸರು ನೊಂದಾಯಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಈ ಯೋಜನೆಯು 2023 ಜನವರಿ1 ರಿಂದ ಡಿಸೆಂಬರ್ 31ರ ವರೆಗೆ ಜಾರಿಯಲ್ಲಿರಲಿದೆ.
ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ. ಈ ಯೋಜನೆಯಡಿ ಗ್ರಾಮೀಣ ಅಥವಾ ನಗರದ ಸಹಕಾರಿಯೊಬ್ಬರು ತಿಂಗಳಿಗೆ ಇಂತಿಷ್ಟರಂತೆ ನಿಗದಿತ ಪ್ರಮಾಣದಲ್ಲಿ ಒಂದು ವರ್ಷದ ಅವಧಿಯಲ್ಲಿ, ಯೋಜನೆಯಲ್ಲಿ ಒಳಗೊಂಡ ಯಾವುದೇ ಶಸ್ತ್ರ ಚಿಕಿತ್ಸೆಯನ್ನು ನಿಗದಿತ ಮಿತಿಯೊಳಗೆ ಷರತ್ತು ಮತ್ತು ನಿಯಮಗಳಿಗೆ ಒಳಪಟ್ಟು ನಗದು ರಹಿತವಾಗಿ ಪಡೆಯಬಹುದಾಗಿರುತ್ತದೆ.
ಕಳೆದ ನವೆಂಬರ್ 1 ರಿಂದ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಯಶಸ್ವಿನಿ ಯೋಜನೆಯಡಿ ಸಹಕಾರ ಸಂಘಗಳ 30 ಲಕ್ಷ ಸದಸ್ಯರನ್ನು ನೋಂದಾವಣಿ ಮಾಡುವ ಗುರಿ ಇದೆ. ಗುರಿ ತಲುಪದೇ ಇದ್ದಲ್ಲಿ ನೋಂದಣಿ ಅಧಿವಯನ್ನು ವಿಸ್ತರಣೆ ಮಾಡುವ ಕುರಿತು ಪರಿಶೀಲನೆ ನಡೆಸುವುದಾಗಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಈ ಯೋಜನೆ ನಿರ್ದಿಷ್ಟವಾಗಿ ಸಹಕಾರ ಸಂಘಗಳ ಸದಸ್ಯರಿಗೆ ಎಲ್ಲರಿಗೂ ವಿಸ್ತರಣೆ ಮಾಡಲು ಸಾಧ್ಯವಿಲ್ಲ. ಯೋಜನೆಯಡಿ ಸದಸ್ಯರಿಗೆ ಉಚಿತ ಚಿಕಿತ್ಸೆ ನೀಡಲು 660 ಆಸ್ಪತ್ರೆಗಳನ್ನು ಸಂಪರ್ಕಿಸಲಾಗಿದೆ. 330 ಆಸ್ಪತ್ರೆಗಳ ಜೊತೆ ಈಗಾಗಲೇ ಒಪ್ಪಂದವಾಗಿದೆ. ಮತ್ತಷ್ಟು ಆಸ್ಪತ್ರೆಗಳ ಜೊತೆ ಒಪ್ಪಂದವಾಗಲಿದೆ ಎಂದರು.
ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1,000 ರೂ. ವಂತಿಗೆ ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ವಂತಿಗೆ ಪಾವತಿಸಿ, ನೊಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
2003ರಲ್ಲಿ ಸಹಕಾರಿ ಇಲಾಖೆಯಲ್ಲಿ ಯಶಸ್ವಿನಿ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. 2003-04ರಿಂದ 2017-18ರವರೆಗೆ ಈ ಯೋಜನೆ ಜಾರಿಯಲ್ಲಿತ್ತು. ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಈ ಯೋಜನೆಯನ್ನು ವರ್ಗಾವಣೆ ಮಾಡಲಾಗಿತ್ತು. 2018ರ ಮೇ ತಿಂಗಳಿನಲ್ಲಿ ಈ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ಅದೇ ವರ್ಷದ ಜೂನ್ನಲ್ಲಿ ಈ ಯೋಜನೆಯನ್ನು ʼಆರೋಗ್ಯ ಕರ್ನಾಟಕ ಯೋಜನೆʼ ಯೊಂದಿಗೆ ವಿಲೀನಗೊಳಿಸಲಾಗಿತ್ತು.
Join The Telegram | Join The WhatsApp |