ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಸಾಗಿಸುವ ಸರಕುಗಳ ಮೇಲೆ ನಿಗಾ ವಹಿಸಲಾಗುತ್ತಿದ್ದು, ಬಸ್ಸುಗಳಲ್ಲಿ ಸೂಕ್ತ ದಾಖಲೆಗಳಿಲ್ಲದ, ನೀತಿ ಸಂಹಿತೆ ಉಲ್ಲಂಘಿಸುವ ವಸ್ತುಗಳ ಸಾಗಾಟಕ್ಕೆ ಅನುಮತಿಸದಂತೆ ನಿರ್ವಾಹಕರು ಹಾಗೂ ಚಾಲಕರಿಗೆ ಸೂಚನೆ ನೀಡಲಾಗಿದೆ.

ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡುವಂತಹ ವಸ್ತುಗಳು ಸೇರಿದಂತೆ ದಾಖಲೆಗಳಿಲ್ಲದ ಸರಕು ಸಾಗಣೆ ಮಾಡುವಂತಿಲ್ಲ. ಅಲ್ಲದೆ, ರಾಜಕೀಯ ಪ್ರಚಾರದ ವಸ್ತುಗಳನ್ನು ಬಸ್ಸಿನಲ್ಲಿ ಪ್ರದರ್ಶಿಸುವಂತಿಲ್ಲ ಹಾಗೂ ಇತರೆ ಪ್ರಯಾಣಿಕರಿಗೆ ಹಂಚುವಂತಿಲ್ಲ. ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಗೆ ಸಂಬಧಪಟ್ಟ ಕರಪತ್ರ, ಬ್ಯಾನರ್ ಸೇರಿದಂತೆ ಇನ್ನಿತರೆ ನಿರ್ಬಂಧಿತ ವಸ್ತುಗಳನ್ನು ಸಾಗಾಣಿಕೆ ಮಾಡಲು ಅನುಮತಿಸದಂತೆ ನಿರ್ದೇಶನ ನೀಡಲಾಗಿರುತ್ತದೆ.

ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಿಷೇಧಿಸಲ್ಪಟ್ಟಿರುವ ವಸ್ತುಗಳು ಹಾಗೂ ಸೂಕ್ತ ದಾಖಲೆಗಳಿಲ್ಲದ ಹಣ, ಚಿನ್ನ, ಬೆಳ್ಳಿ ಇತ್ಯಾದಿಗಳನ್ನು ಸಾಗಾಣಿಕೆ ಮಾಡದಂತೆ ಹಾಗೂ ನಿಯಮ ಪಾಲಿಸುವಲ್ಲಿ ಸಾರ್ವಜನಿಕ ಪ್ರಯಾಣಿಕರು ಸಂಸ್ಥೆಯೊಂದಿಗೆ ಸಹಕರಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ. ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.