ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಮತಕ್ಷೇತ್ರಗಳಲ್ಲಿ ನನ್ನದೇ ಆದ ಭಕ್ತ ವರ್ಗವಿದೆ. ಈ ನಿಟ್ಟಿನಲ್ಲಿ ಈ ಬಾರಿ ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಕಿತ್ತೂರು ತಾಲೂಕು ದೇಗುಲಹಳ್ಳಿ ಮತ್ತು ಅಂಬಡಗಟ್ಟಿ ಗ್ರಾಮದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ವೀರೇಶ್ವರ ಸ್ವಾಮೀಜಿ ಘೋಷಣೆ ಮಾಡಿದ್ದಾರೆ.

ಧಾರವಾಡ ಲೋಕಸಭಾ ಮತಕ್ಷೇತ್ರದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ವಿರುದ್ಧ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಆದರೆ, ಬೆಳಗಾವಿಯಲ್ಲಿ ಸ್ಪರ್ಧಿಸಿರುವ ಈ ಸ್ವಾಮೀಜಿ ನಾನು ಯಾರ ವಿರುದ್ಧವಾಗಿ ಸ್ಪರ್ಧಿಸುವುದಿಲ್ಲ. ಬೆಳಗಾವಿ ಮತಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಬಯಸಿರುವುದಾಗಿ ತಿಳಿಸಿದ್ದಾರೆ.

ನಾನು ಯಾವುದೇ ಪಕ್ಷದ ವಿರುದ್ಧ ಸಿಟ್ಟಿಗೆದ್ದು ಸ್ಪರ್ಧಿಸುತ್ತಿಲ್ಲ, ಮಟದ ಭಕ್ತರ ಇಚ್ಛೆಯಂತೆ ಅವರೊಂದಿಗೆ ಚರ್ಚಿಸಿ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ಮಠದ ಪರಂಪರೆ ಇಟ್ಟುಕೊಂಡು ಈಗಾಗಲೇ ಸಮಾಜ ಸೇವೆ ಮಾಡುತ್ತಿದ್ದು ಜನಸೇವೆ ಮಾಡಬೇಕು ಎಂಬ ಸದುದ್ದೇಶದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಮಠದ ಭಕ್ತರು ಮತ್ತು ನಾಗರಿಕರ ಪರ ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.