ಬೆಳಗಾವಿ : ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದ ಕಿತ್ತೂರು ದೇಗುಲ ಹಳ್ಳಿ-ಅಂಬಡಗಟ್ಟಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಇದೀಗ ಕ್ಷೇತ್ರ ಬದಲಿಸುವ ಕೈಗೊಂಡಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಎಂಟು ಮತಕ್ಷೇತ್ರದಲ್ಲಿ ನನ್ನ ಭಕ್ತರಿದ್ದಾರೆ. ಅವರ ಒತ್ತಾಯದಿಂದ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ನಡೆಸುವುದಾಗಿ ಸ್ವಾಮೀಜಿ ಹೇಳಿದ್ದರು. ಇದೀಗ ದಿಢೀರ್ ತಮ್ಮ ನಿರ್ಧಾರ ಬದಲಿಸಿರುವ ಸ್ವಾಮೀಜಿ, ಕಿತ್ತೂರು ಮತಕ್ಷೇತ್ರ ಉತ್ತರ ಕನ್ನಡ ಲೋಕಸಭಾ ವ್ಯಾಪ್ತಿಗೆ ಬರುವುದರಿಂದ ನಾನು ಈ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ಮಠದ ಸ್ವಾಮೀಜಿಯಾಗಿ ಸೇವೆ ಸಲ್ಲಿಸುತ್ತಿರುವ ನಾನು ಸಮಾಜ ಸೇವೆ ಮಾಡಬೇಕು. ಉತ್ತಮ ಆಡಳಿತ ನೀಡುವ ಉದ್ದೇಶದಿಂದ ಕಣಕ್ಕಿಳಿಯುತ್ತಿದ್ದೇನೆ. ಇದು ನನ್ನ ವೈಯಕ್ತಿಕ ಹಾಗೂ ಭಕ್ತರ ಇಚ್ಛೆ ಆಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಿತ್ತೂರು ಹಾಗೂ ಖಾನಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಭೆ ನಡೆಸಲಾಗಿದ್ದು, ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಜನ ಸದಾ ನನ್ನೊಂದಿಗೆ ಇದ್ದು ಚುನಾವಣೆಯಲ್ಲಿ ಬೆಂಬಲಿಸುವುದಾಗಿ ಹೇಳಿದ್ದಾರೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸುತ್ತಿದ್ದಾರೆ. ಆದರೆ, ನನಗೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಒಂದೇ. ಜನಸೇವೆ ಮಾಡುವ ಉದ್ದೇಶದಿಂದ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದೇನೆ ಎಂದು ಅವರು ತಿಳಿಸಿದರು.