ಬೆಂಗಳೂರು : ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಷವನ್ನು ಉದ್ಘಾಟಿಸಿದ ಬಳಿಕ ರೈತ ಪರ ಬಜೆಟ್ ರೂಪಿಸಲು ರೈಸ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು.

ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮರ್ಗದರ್ಶನ ನನಗೆ ಅನುಕೂಲವಾಯಿತು ಎಂದರು.

ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಇವರು ಬೆಳೆಸಿದ ರೈತ ಚಳವಳಿ ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ ಆಯಿತು. ರೈತ ಹೋರಾಟ ಮತ್ತು ರೈತ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೂ ಬಹಳ ಸಂತಸ ಮತ್ತು ಹೆಮ್ಮೆಯ ವಿಷಯ. ನಂಜುಂಡಸ್ವಾಮಿ ಮತ್ತು ರೈತ ಹೋರಾಟ ಸಮಾಜ ಮತ್ತು ಸರ್ಕಾರಗಳ ಮೇಲೆ ಪರಿಣಾಮ ಬೀರಿದೆ ಎಂದರು.

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೆ ರಾಜಕೀಯ ಪ್ರೇರಣೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಬಡಗಲಾಪುರ ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದ ರೈತ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಆಳಂದ ಶಾಸಕ ಬಿ.ಆರ್. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ದರ್ಶನ್ ಪುಟ್ಟಣ್ಣಯ್ಯ, ದಲಿತ ಮುಖಂಡ ಮಾವಳ್ಳಿ ಶಂಕರ್, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಂಚಾಲಕರಾದ ಕುಮಾರ್ ಸಮತಳ ಸೇರಿ ಹಲವು ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.