ಪತ್ರಕರ್ತರ ಸಮೂಹಕ್ಕೆ ಹೊಸ ವರ್ಷದ ಶುಭ ಕೋರಿದ ಸಿಎಂ : ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ: ಸಿ.ಎಂ.ಸಿದ್ದರಾಮಯ್ಯ ಅಭಿಮತ

ಬೆಂಗಳೂರು :
ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡ ಮಾಡುವ “ವರ್ಷದ ವ್ಯಕ್ತಿ-ವಿಶೇಷ ವ್ಯಕ್ತಿ” ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, 2024ರ ಪ್ರೆಸ್ ಕ್ಲಬ್ ಡೈರಿ ಬಿಡುಗಡೆಗೊಳಿಸಿ ಮಾತನಾಡಿದರು.

ಸುದೀರ್ಘ ಮತ್ತು ಅರ್ಥಪೂರ್ಣ ಚರ್ಚೆಯ ಬಳಿಕ ನಮ್ಮ ಈ ಸಂವಿಧಾನ ಜಾರಿಯಾಗಿದೆ. ಆದ್ದರಿಂದ ಈ ಸಂವಿಧಾನವನ್ನು ಗೌರವಿಸುವುದು, ಪಾಲಿಸುವುದು ಎಲ್ಲಾ ರಾಜಕೀಯ ಪಕ್ಷಗಳ, ವ್ಯಕ್ತಿಗಳ ಕರ್ತವ್ಯ ಎಂದರು.

ಅವಕಾಶ ವಂಚಿತರ ಪರವಾಗಿ, ಧ್ವನಿ ಇಲ್ಲದವರ ಪರವಾಗಿ ದ್ವನಿ ಎತ್ತಿ ಬೆಂಬಲಿಸುವುದು, ವಸ್ತುನಿಷ್ಠವಾಗಿ ಸುದ್ದಿಗಳನ್ನು ವರದಿ ಮಾಡುವುದು ಪತ್ರಿಕಾ ವೃತ್ತಿಯ ಮೂಲಭೂತ ಮೌಲ್ಯ. ಈ ಮೌಲ್ಯಗಳನ್ನು ಪಾಲಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಇದನ್ನು ಬಿಟ್ಟು ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನು ದೊಡ್ಡ ಚರ್ಚೆ ಮಾಡಿ ಮೌಢ್ಯ ಬೆಳೆಸಿದಂತಹ ರೀತಿಯಲ್ಲಿ ಕೆಲಸ ಮಾಡಬೇಡಿ ಎಂದು ಕಿವಿ ಮಾತು ಹೇಳಿದರು.

ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು. ಸ್ವಾತಂತ್ರ್ಯಾಪೂರ್ವ ದಲ್ಲಿ ದೇಶದ ಅಭಿವೃದ್ಧಿಯ ಚರ್ಚೆ ಮತ್ತು ಕನಸು ಇತ್ತು. ಈಗ ಮಾಧ್ಯಮ ಉದ್ಯಮಿಗಳ ಕೈಗೆ ಸಿಕ್ಕಿ ಕೊಂಡಿದೆ. ಉದ್ಯಮಿಗಳಿಗೆ ಸಮಾಜಮುಖಿಯಾದ ಯಾವ ಕಾಳಜಿಗಳೂ ಇರುವುದಿಲ್ಲ. ಈ ಬಗ್ಗೆ ಪತ್ರಕರ್ತ ಸಮೂಹ ಎಚ್ಚರ ವಹಿಸಬೇಕು ಎಂದರು.

ವರ್ಷದ ವ್ಯಕ್ತಿ ಪ್ರಶಸ್ತಿ ಪುರಸ್ಕೃತರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚತುರ ಸಂಘಟಕರು ಮತ್ತು ಕ್ರಿಯಾಶೀಲ ವ್ಯಕ್ತಿ ಎಂದು ಇದೇ ಸಂದರ್ಭದಲ್ಲಿ ಮೆಚ್ಚುಗೆ ಸೂಚಿಸಿದರು.

ನನ್ನನ್ನು ಜೆಡಿಎಸ್ ನಿಂದ ಉಚ್ಚಾಟನೆ ಮಾಡಿದರೇ ಹೊರತು ನಾನು ಜೆಡಿಎಸ್ ಬಿಡಲಿಲ್ಲ. ಹೀಗಾಗಿ ವರದಿ, ವಿಶ್ಲೇಷಣೆ ಮಾಡುವಾಗ ನಾನು ಜೆಡಿಎಸ್ ಪಕ್ಷ ತೊರೆದೆ ಎಂದು ಬರೆಯುವುದು ಸರಿಯಲ್ಲ ಎಂದರು.

ವರ್ಷದ ವ್ಯಕ್ತಿ ಪ್ರಶಸ್ತಿ ಪಡೆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಶೇಷ ಪ್ರಶಸ್ತಿ ಪುರಸ್ಕೃತ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರಿಗೆ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು.

ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಪ್ರಶಸ್ತಿ ಪ್ರದಾನ ಮಾಡಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಉಪ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ತ್ಯಾಗರಾಜ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.