Join The Telegram | Join The WhatsApp |
ಬೆಂಗಳೂರು :
ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಗದ್ದಲ ಮಾಡಿದ ಘಟನೆ ಕುರಿತು ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ವಕೀಲ ಕೆ. ಎನ್ ಜಗದೀಶ್ ವಿರುದ್ಧ ದಾಖಲಿಸಿದ್ದ ಸ್ವಯಂಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣವನ್ನು ಹೈಕೋರ್ಟ್ ಕೈಬಿಟ್ಟಿದೆ. ಆದರೆ, ಅವರಿಗೆ ಎರಡು ಲಕ್ಷ ರೂಪಾಯಿ ದಂಡ ವಿಧಿಸಿದೆ.ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಈ ರೀತಿ ನಡೆದುಕೊಳ್ಳುವುದಿಲ್ಲ ಎಂದು ಜಗದೀಶ್ ಅವರು ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಅವರಿದ್ದ ವಿಭಾಗೀಯ ಪೀಠಕ್ಕೆ ಕ್ಷಮೆಯಾಚನೆ ಪತ್ರ ಸಲ್ಲಿಸಿದರು. ಪ್ರಮಾಣಪತ್ರ ಸ್ವೀಕರಿಸಿದ ನ್ಯಾಯಪೀಠ, ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಟ್ಟಿತು.
ಇದೇ ವೇಳೆ, ವಕೀಲ ಜಗದೀಶ್ಗೆ 2 ಲಕ್ಷ ರೂ. ದಂಡ ವಿಧಿಸಿದ ಪೀಠ ದಂಡದ ಮೊತ್ತದಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ 1 ಲಕ್ಷ ರೂ, ವಕೀಲರ ಸಂಘದ ಗ್ರಂಥಾಲಯ ಅಭಿವೃದ್ಧಿಗೆ 50 ಸಾವಿರ ರೂ. ಹಾಗೂ ಹೈಕೋರ್ಟ್ – ಗುಮಾಸ್ತರ ಕ್ಷೇಮಾಭಿವೃದ್ಧಿ ಸಂಘಕ್ಕೆ 50 ಸಾವಿರ ರೂ. ಪಾವತಿಸುವಂತೆ ಸೂಚಿಸಿತು. ಜತೆಗೆ, ಈ ಆದೇಶ ಪಾಲಿಸಿರುವ ಕುರಿತು ಡಿ.16ರಂದು ನ್ಯಾಯಾಲಯಕ್ಕೆ ತಿಳಿಸಬೇಕು ಎಂದೂ ನಿರ್ದೇಶಿಸಿತು.
ಏನಿದು ಪ್ರಕರಣ..?
ಪ್ರಕರಣವೊಂದರ ವಿಚಾರಣೆಗೆ ನಗರದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಆಗಮಿಸಿದ್ದ ವಕೀಲ ಜಗದೀಶ್ ನ್ಯಾಯಾಲಯ ಪ್ರಕ್ರಿಯೆಗೆ ಅಡ್ಡಿಪಡಿಸಿದ್ದರು. ಅಲ್ಲದೆ, ನ್ಯಾಯಾಲಯದಲ್ಲಿ ಟೇಬಲ್ ಗುದ್ದಿ ಗದ್ದಲವುಂಟು ಮಾಡಿದ್ದರು. ಈ ಬಗ್ಗೆ ನ್ಯಾಯಾಧೀಶರು ಹಲವು ಬಾರಿ ಮನವಿ ಮಾಡಿದರೂ ಗಲಾಟೆ ಮುಂದುವರಿಸಿದ್ದರು.
ಈ ಬಗ್ಗೆ ಜಗದೀಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಿಟಿ ಸಿವಿಲ್ ನ್ಯಾಯಾಲಯದ ರಿಜಿಸ್ಟಾರ್ ಅವರು ಹೈಕೋರ್ಟ್ಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಈ ಸಂಬಂಧ ಹೈಕೋರ್ಟ್ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು.
Join The Telegram | Join The WhatsApp |