![](https://udayaprabha.com/wp-content/uploads/2023/11/IMG_20231130_162836.jpg)
ಬೆಳಗಾವಿ :
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಕೂಡಲಸಂಗಮ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಇದೀಗ ಸರಕಾರಕ್ಕೆ ಅಂತಿಮ ಎಚ್ಚರಿಕೆ ರವಾನಿಸಿದ್ದಾರೆ.
ನಗರದಲ್ಲಿ ಗುರುವಾರ ಬೆಳಗಾವಿಯಲ್ಲಿ ಅವರು ಮಾತನಾಡಿ, ರಾಜ್ಯ ಸರಕಾರ ಈ ಕೂಡಲೇ ಪಂಚಮಸಾಲಿ ಸಮುದಾಯದ ಬಹುದಿನಗಳ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದ್ದಾರೆ.
ಬೆಳಗಾವಿಯ ಪ್ರೆಸಿಡೆನ್ಸಿ ಕ್ಲಬ್ನಲ್ಲಿ ಪಂಚಮಸಾಲಿ ಸಮಾಜದ ರಾಜ್ಯಕಾರಣಿ ಸಭೆ
ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು.
ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಶಾಸಕ ಶಶಿಕಾಂತ ನಾಯಕ, ಶಿವಶಂಕರಪ್ಪ ಸೇರಿ ಹಲವರು ಭಾಗಿಯಾಗಿದ್ದರು.
2ಎ ಮೀಸಲಾತಿಯ ಹೋರಾಟದ ರೂಪರೇಷೆ ಸಂಬಂಧ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ರಾಜ್ಯ ಕಾರ್ಯಕಾರಣಿ ಸಭೆಯ ಬಳಿಕ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಿಷ್ಟು :
ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ 2 ಎ ಮೀಸಲಾತಿ ನೀಡಬೇಕು. ಎಲ್ಲ ಲಿಂಗಾಯತ ಒಳಪಂಗಡಗಳನ್ನು ಕೇಂದ್ರ ಸರ್ಕಾರ ಒಬಿಸಿ ಪಟ್ಟಿಗೆ ಸೇರಿಸಬೇಕು. ಈ ಸಂಬಂಧ ಮೂರು ವರ್ಷಗಳಿಂದ ಹೋರಾಟ ಮಾಡಿ ರಾಜ್ಯ ಹಾಗೂ ಕೇಂದ್ರದ ಮೇಲೆ ಒತ್ತಡ ಹೇರುತ್ತಿದ್ದೇವೆ.
ರಾಜ್ಯದಲ್ಲಿ ಹೊಸ ಸರ್ಕಾರ ಬಂದ ಬಳಿಕ ನಮ್ಮ ನಿಯೋಗ ಸಿಎಂ ಭೇಟಿ ಮಾಡಿ ಚರ್ಚಿಸಿತ್ತು. ಹಿಂದುಳಿದ ಆಯೋಗದ ವರದಿ ಪಡೆದು ಚರ್ಚೆ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದರು.
ಆದರೆ, ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆಯಲಿಲ್ಲ, ಹೀಗಾಗಿ ಹೋರಾಟ ಮರಳಿ ಆರಂಭಿಸಿದ್ದೇವೆ. ಶ್ರಾವಣ ಮಾಸದಲ್ಲಿ ಇಷ್ಟಲಿಂಗ ಪೂಜೆ ಮೂಲಕ ನಿಪ್ಪಾಣಿಯಿಂದ ಹೋರಾಟ ಆರಂಭಿಸಲಾಯಿತು.
ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಧಾರವಾಡದಲ್ಲಿ ಹೋರಾಟ ಮಾಡಲಾಯಿತು.
ಹೀಗಿದ್ದರೂ ನಮ್ಮ ಸಮಾಜದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮುಂದುವರಿದಿದೆ.
ಚಳಿಗಾಲದ ಅಧಿವೇಶನ ವೇಳೆ ಬೆಳಗಾವಿಯಲ್ಲಿ ನಮ್ಮ ಸಮಾಜದ ಹಾಲಿ-ಮಾಜಿ ಶಾಸಕರ ಸಭೆ ನಡೆಯಲಿದೆ.
ಈ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲು ತೀರ್ಮಾನಿಸಿದ್ದೇವೆ.
ಚಳಿಗಾಲ ಅಧಿವೇಶನ ವೇಳೆ ಸರ್ಕಾರದ ಗಮನ ಸೆಳೆಯಲು ಇಂದಿನ ಸಭೆಯಲ್ಲಿ ಚರ್ಚಿಸಿದ್ದೇವೆ.
ಸಿಎಂರನ್ನು ಸಭೆಗೆ ಕರೆದುಕೊಂಡು ಬರಲು ಆಡಳಿತ ಪಕ್ಷದ ಐವರು ಶಾಸಕರಿಗೆ ಮನವಿ ಮಾಡಿದ್ದೇವೆ.
ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ, ವಿಜಯಾನಂದ ಕಾಶಪ್ಪನವರ, ವಿನಯ ಕುಲಕರ್ಣಿ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ನಮ್ಮ ಹೋರಾಟ ತಾರ್ಕಿಕ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸಿಎಂಗೆ ಮನವಿ ಮಾಡುತ್ತೇವೆ.
ಅಧಿವೇಶನ ವೇಳೆ ಸುವರ್ಣ ಸೌಧ ಎದುರು ಇಷ್ಟಲಿಂಗ ಪೂಜೆ ಮೂಲಕ ಹೋರಾಟ ನಡೆಸಲಿದ್ದೇವೆ. ಸಿಎಂ ಸಭೆ ಬಳಿಕ ನಮ್ಮ ಶಾಸಕರ ಜೊತೆಗೆ ಚರ್ಚಿಸಿ ದಿನಾಂಕ ನಿಗದಿ ಮಾಡುತ್ತೇವೆ. ಲೋಕಸಭೆ ಚುನಾವಣೆ ಒಳಗೆ ರಾಜ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ಎಲ್ಲಾ ಲಿಂಗಾಯತ ಒಳಪಂಗಡಗಳನ್ನು ಕೇಂದ್ರ ಸರ್ಕಾರ ಒಬಿಸಿ ಪಟ್ಟಿಗೆ ಸೇರಿಸಬೇಕು. ಇಲ್ಲವಾದರೆ ಬೆಂಗಳೂರು, ಬೆಳಗಾವಿ, ಕೂಡಲಸಂಗಮದಲ್ಲಿ ಬೃಹತ್ ಸಮಾವೇಶ ನಡೆಸಬೇಕಾಗುತ್ತದೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕೂಡಲಸಂಗಮ ಸ್ವಾಮೀಜಿ ಎಚ್ಚರಿಕೆ ರವಾನಿಸಿದ್ದಾರೆ.