ಉಡುಪಿ: ರಾಜ್ಯ ಸರ್ಕಾರದ 2025-26ನೇ ಸಾಲಿನ ಬಜೆಟ್‌ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ನೀಡದೇ ಇರುವುದು ಖಂಡನೀಯ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿರಣ್ ಕುಮಾರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ನಿರ್ವಹಣೆಗೆ ಅಗತ್ಯ ಅನುದಾನ ಮಂಜೂರು ಮಾಡಿಲ್ಲ. ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ಪೂರಕವಾಗಿ ಹೆಚ್ಚುವರಿ ಅನುದಾನ ನೀಡದೇ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ವಹಣೆಗೆ ಬಜೆಟ್‌ನಲ್ಲಿ ಅನುದಾನ ನೀಡದೇ ಬಡವರು ಸೌಲಭ್ಯ ವಂಚಿತರಾಗುತ್ತಿದ್ದಾರೆ ಎಂದರು.

ಇದನ್ನು ವಿರೋಧಿಸಿ ನಗರ ಬಿಜೆಪಿ ವತಿಯಿಂದ ಇದೇ 31ರಂದು ಸಂಜೆ 4ಕ್ಕೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಕೃಷ್ಣಮಠದ ಪಾರ್ಕಿಂಗ್‌ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಬಳಿಕ ನಡೆಯುವ ಪ್ರತಿಭಟನಾ ಸಭೆಯಲ್ಲಿ ಜಿಲ್ಲೆಯ ಐವರು ಶಾಸಕರು, ಶಾಸಕ ಹರೀಶ್ ಪೂಂಜಾ, ಪಕ್ಷದ ಜಿಲ್ಲಾ ಘಟಕ ಅಧ್ಯಕ್ಷ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ನಗರ ಅಧ್ಯಕ್ಷ ದಿನೇಶ್ ಆಮೀನ್, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿ ಬಿ.ಶೆಟ್ಟಿ, ನಗರ ಗ್ರಾಮಾಂತರ ಅಧ್ಯಕ್ಷ ರಾಜೀವ್ ಕುಲಾಲ್ ಭಾಗವಹಿಸಿದ್ದರು.